ADVERTISEMENT

ಮೋದಿ ಪ್ರಮಾಣ ವಚನ: ಬಿಜೆಪಿ ಕಾರ್ಯಕರ್ತರ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 10 ಜೂನ್ 2024, 4:30 IST
Last Updated 10 ಜೂನ್ 2024, 4:30 IST
ಶ್ರೀರಂಗಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಭಾನುವಾರ ಸಂಜೆ ವಿಜಯೋತ್ಸವ ಆಚರಿಸಿದರು
ಶ್ರೀರಂಗಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಭಾನುವಾರ ಸಂಜೆ ವಿಜಯೋತ್ಸವ ಆಚರಿಸಿದರು   

ಶ್ರೀರಂಗಪಟ್ಟಣ: ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾಗಿ ಮೂರನೇ ಬಾರಿಗೆ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಭಾನುವಾರ ರಾತ್ರಿ ಪಟ್ಟಣದಲ್ಲಿ ಸಂಭ್ರಮ ಆಚರಿಸಿದರು.

ಇಲ್ಲಿನ ಬೆಂಗಳೂರು– ಮೈಸೂರು ಹೆದ್ದಾರಿಯ ಬಳಿ ಕುವೆಂಪು ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಬಿಜೆಪಿ ಮಂಡಲದ ಅಧ್ಯಕ್ಷ ಪೀಹಳ್ಳಿ ಎಸ್‌. ರಮೇಶ್‌ ಅವರ ನೇತೃತ್ವದಲ್ಲಿ ಪಂಜುಗಳನ್ನು ಹಿಡಿದು ಮುಖ್ಯ ಬೀದಿಯಲ್ಲಿ ಮೆರವಣಿಗೆ ನಡೆಸಿದರು. ನರೇಂದ್ರ ಮೋದಿ ಮತ್ತು ಬಿಜೆಪಿ ಪರವಾಗಿ ಸಾಲು ಸಾಲು ಘೋಷಣೆಗಳು ಕೇಳಿ ಬಂದವು. ಪರಸ್ಪರ ಸಿಹಿ ಹಂಚಿ ಖುಷಿಪಟ್ಟರು.

‘ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಈ ದೇಶದ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿರುವುದು ದೇಶದಲ್ಲಿ ಐತಿಹಾಸಿಕ ಕ್ಷಣವಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಈ ದೇಶವನ್ನು ಸಮರ್ಥವಾಗಿ ಮುನ್ನಡೆಸುವ ಶಕ್ತಿ ಇರುವುದು ನರೇಂದ್ರ ಮೋದಿ ಅವರಿಗೆ ಮಾತ್ರ. ಅವರು ದೇಶವನ್ನು ಪ್ರಗತಿಯತ್ತ ಕೊಂಡೊಯ್ಯಲಿದ್ದಾರೆ. ಎಚ್.ಡಿ. ಕುಮಾರಸ್ವಾಮಿ ಅವರ ಈ ಜಿಲ್ಲೆಯಿಂದ ಗೆದ್ದು ಕೇಂದ್ರದಲ್ಲಿ ಸಚಿವರಾಗಿರುವುದು ಸಂತಸ ತಂದಿದೆ’ ಎಂದು ಪೀಹಳ್ಳಿ ಎಸ್‌. ರಮೇಶ್ ಹೇಳಿದರು.

ADVERTISEMENT

ಪಕ್ಷದ ಮುಖಂಡರಾದ ಕೆ.ಎಸ್‌. ನಂಜುಂಡೇಗೌಡ, ಹನಿಯಂಬಾಡಿ ನಾಗರಾಜು, ಬಿ.ಸಿ. ಸಂತೋಷ್‌ಕುಮಾರ್‌, ಕೆ.ಆರ್‌. ಸೊಸೈಟಿ ಅಧ್ಯಕ್ಷ ಎಸ್‌. ರಘು, ಎಂ.ಜೆ. ಪುಟ್ಟರಾಜು, ಹೇಮಂತಕುಮಾರ್‌, ಕೃಷ್ಣೇಗೌಡ, ಮಂಜುನಾಥ್‌, ಮೊಳ್ಳೇನಹಳ್ಳಿ ಚಂದ್ರು, ಎಂ.ವಿ. ಕೃಷ್ಣ, ರಾಮಚಂದ್ರು, ಮಹದೇವು, ಮಹೇಶ್‌, ವಕೀಲ ಟಿ. ಬಾಲರಾಜು, ಸುನಿಲ್‌ಕುಮಾರ್‌ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಶ್ರೀರಂಗಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಭಾನುವಾರ ಸಂಜೆ ಪಂಜಿನ ಮೆರವಣಿಗೆ ನಡೆಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.