ಮದ್ದೂರು: ‘ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಎಸ್ಐಟಿ ತನಿಖೆಯಲ್ಲಿ ರಾಜ್ಯ ಸರ್ಕಾರದ ಹಸ್ತಕ್ಷೇಪವಿದೆ’ ಎಂದು ಆರೋಪಿಸಿ ಜೆಡಿಎಸ್ ಮುಖಂಡ ಡಿ.ಸಿ.ತಮ್ಮಣ್ಣ ನೇತೃತ್ವದಲ್ಲಿ ಕಾರ್ಯಕರ್ತರು ಭಾನುವಾರ ಪ್ರತಿಭಟನೆ ನಡೆಸಿದರು.
ಪಟ್ಟಣದ ಐಬಿ ವೃತ್ತದಲ್ಲಿ ಜಮಾಯಿಸಿದ ಜೆಡಿಎಸ್, ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಡಿ.ಸಿ.ತಮ್ಮಣ್ಣ ಮಾತನಾಡಿ, ‘ಪೆನ್ಡ್ರೈವ್ ವಿಚಾರದಲ್ಲಿ ಎಚ್.ಡಿ. ದೇವೇಗೌಡ ಅವರ ಕುಟುಂಬವನ್ನು ರಾಜಕೀಯವಾಗಿ ಹಣೆಯಲು ಕಾಂಗ್ರೆಸ್ ಮುಖಂಡರು ಆರೋಪಗಳನ್ನು ಮಾಡುತ್ತಿದ್ದಾರೆ. ನಮ್ಮ ವರಿಷ್ಠರ ಬಗ್ಗೆ ಲಘುವಾಗಿ ಮಾತನಾಡುವುದು ಸರಿಯಲ್ಲ’ ಎಂದು ಹೇಳಿದರು.
‘ಶಾಸಕ ಉದಯ್ ಅವರ ಬಗ್ಗೆ ತಿಳಿಯಲು ಬೆಂಗಳೂರಿನ ಪೊಲೀಸ್ ಠಾಣೆಗಳಿಗೆ ಹೋದರೆ ಗೊತ್ತಾಗುತ್ತದೆ. ಅವರು ನಮ್ಮ ವರಿಷ್ಠರ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ. ಪ್ರಜ್ವಲ್ ಒಂದು ವೇಳೆ ತಪ್ಪು ಮಾಡಿದ್ದರೆ ಅವರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗಲಿ’ ಎಂದರು.
‘ಸಂತ್ರಸ್ತ ಹೆಣ್ಣುಮಕ್ಕಳ ಬಗ್ಗೆ ಕಾಳಜಿ ಇದ್ದರೆ ಪೆನ್ಡ್ರೈವ್ ಹಂಚಿ, ಕುಟುಂಬಗಳ ಗೌರವ ಹಾಳು ಮಾಡಿದವರ ವಿರುದ್ಧ ಕ್ರಮವಹಿಸಿಬೇಕು. ಎಸ್ಐಟಿ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದ ರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಣತಿಯಂತೆ ನಡೆದುಕೊಳ್ಳುತ್ತಿದ್ದಾರೆ. ತನಿಖೆಯನ್ನು ಸಿಬಿಐಗೆ ವಹಿಸಬೇಕು’ ಎಂದು ಒತ್ತಾಯಿಸಿದರು.
ಮೈಸೂರು – ಬೆಂಗಳೂರು ಹೆದ್ದಾರಿ ತಡೆದದ್ದರಿಂದ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಎಲ್.ಆರ್.ಶಿವರಾಮೇಗೌಡ ಅವರ ಪ್ರತಿಕೃತಿಯನ್ನು ಕಾರ್ಯಕರ್ತರು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ತಾಲ್ಲೂಕು ಅಧ್ಯಕ್ಷ ಚಿಕ್ಕತಿಮ್ಮೇಗೌಡ, ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಶ್ವೇತಾ, ಪುರಸಭಾ ಸದಸ್ಯರಾದ ಪ್ರಿಯಾಂಕ ಅಪ್ಪುಗೌಡ, ವನಿತಾ, ಸುರೇಶ್ ಕುಮಾರ್, ಜಿ.ಪಿ.ಯೋಗೇಶ್, ಮುಖಂಡರಾದ ಅಪ್ಪುಗೌಡ, ರವಿ ಚನ್ನಸಂದ್ರ, ಗೆಜ್ಜಲಗೆರೆ ಯೋಗೇಶ್, ರಮೇಶ್, ಶಿವಪುರ ರಾಮು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.