ತಿ.ನರಸೀಪುರ: ‘ವಿಧಾನ ಪರಿಷತ್ತಿನ ಹನ್ನೊಂದು ಸ್ಥಾನಗಳಿಗೆ ಜೂನ್ 6 ರಂದು ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿಯಿಂದ ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳ ವ್ಯಾಪ್ತಿಯ ಪರಿಶಿಷ್ಟ ಜಾತಿಯವರಿಗೆ ಅವಕಾಶ ಕಲ್ಪಿಸಿಕೊಡಬೇಕು’ ಎಂದು ಪಕ್ಷದ ಜಿಲ್ಲಾ ಗ್ರಾಮಾಂತರ ಎಸ್ಸಿ ಮೋರ್ಚಾ ಅಧ್ಯಕ್ಷ ತೊಟ್ವವಾಡಿ ಅನಿಲ್ ಕುಮಾರ್ ಮನವಿ ಮಾಡಿದ್ದಾರೆ.
‘ಬಿಜೆಪಿಯಿಂದ ಮೂವರಿಗೆ ಅವಕಾಶವಿದೆ. ಮೂರು ಸ್ಥಾನ ಗೆಲ್ಲುವ ಅವಕಾಶಗಳಿದ್ದು, ಅದರಲ್ಲಿ ಒಂದು ಸ್ಥಾನವನ್ನು ಪರಿಶಿಷ್ಟ ಜಾತಿಗೆ ಬಿಟ್ಟು ಕೊಡಬೇಕು. ಇದುವರೆಗೂ ಈ ಭಾಗದ ಪರಿಶಿಷ್ಟ ಜಾತಿಯವರಿಗೆ ವಿಧಾನಸಭೆಯಿಂದ ವಿಧಾನ ಪರಿಷತ್ಗೆ ಆಯ್ಕೆಯಾಗಲು ಅವಕಾಶ ದೊರಕಿಲ್ಲ’ ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.
‘ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಈ ಬಗ್ಗೆ ಗಮನಹರಿಸಿ ವರಿಷ್ಠರೊಂದಿಗೆ ಚರ್ಚಿಸಿ ಪಕ್ಷ ಸಂಘಟನೆಗೆ ಪೂರಕವಾಗಿ ಹಾಗೂ ಮುಂಬರುವ ಸ್ಥಳೀಯ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಸಂಘಟನೆ ಮಾಡಲು ಅನುಕೂಲಕವಾಗುವ ದೃಷ್ಟಿಯಿಂದ ಪರಿಶಿಷ್ಟ ಜಾತಿಯವರಿಗೆ ಅವಕಾಶ ನೀಡಬೇಕು’ ಎಂದು ಪಕ್ಷದ ವರಿಷ್ಠರನ್ನು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.