ತಿ.ನರಸೀಪುರ: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಮರಕುಂಬಿ ಗ್ರಾಮದಲ್ಲಿ ನಡೆದ ಜಾತಿ ಸಂಘರ್ಷ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ನ್ಯಾಯಾಲಯ ನೀಡಿ 98 ಮಂದಿಗೆ ಜೀವಾವಧಿ, ಮೂವರಿಗೆ ಐದು ವರ್ಷ ಶಿಕ್ಷೆ ವಿಧಿಸಿರುವುದು ದೇಶದ ಬಹು ದೊಡ್ಡ ಐತಿಹಾಸಿಕ ಆದೇಶ’ ಎಂದು ದಸಂಸ ಜಿಲ್ಲಾ ಸಂಚಾಲಕ ಆಲಗೂಡು ಶಿವಕುಮಾರ್ ಹೇಳಿದ್ದಾರೆ.
‘ಕೊಪ್ಪಳ ಜಿಲ್ಲೆಯಲ್ಲಿ ಆಗಾಗ್ಗೆ ಕ್ಷುಲ್ಲಕ ಕಾರಣಗಳಿಗೆ ದಲಿತರ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ. ಅಲ್ಲದೆ ರಾಜ್ಯದಲ್ಲಿಯೂ ಬಹುತೇಕ ಗ್ರಾಮಗಳಲ್ಲಿ ಇನ್ನೂ ಜಾತಿ ಕಾರಣಕ್ಕಾಗಿ ಕೆಲವು ಸಾರ್ವಜನಿಕ ಸ್ಥಳಗಳಲ್ಲಿ ಪ್ರವೇಶ ನಿರಾಕರಿಸುವ ಅಮಾನವೀಯ ಘಟನೆಗಳು ನಡೆಯುತ್ತಿವೆ. ಇಂತಹ ಸಂದರ್ಭದಲ್ಲಿ ನ್ಯಾಯಾಲಯದ ಈ ಆದೇಶ ರಾಜ್ಯದ ದಲಿತರಿಗೆ ನ್ಯಾಯಾಂಗ ವ್ಯವಸ್ಥೆಯ ಮೇಲೆ ಭರವಸೆ ಮೂಡಿಸುವ ಜೊತೆಗೆ ಆತ್ಮಸ್ಥೈರ್ಯ ತಂದಿದೆ. ಆದೇಶವನ್ನು ದಲಿತ ಸಂಘರ್ಷ ಸಮಿತಿ ಸ್ವಾಗತಿಸುತ್ತದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿರುವ ಪೊಲೀಸ್ ತನಿಖಾಧಿಕಾರಿಗಳು ಹಾಗೂ ನೊಂದವರ ಪರ ವಾದಿಸಿದ ಸರ್ಕಾರಿ ವಕೀಲರಿಗೆ ಅಭಿನಂದನೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.