ಮೈಸೂರು: ‘ಮುಡಾ ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು’ ಎಂದು ಒತ್ತಾಯಿಸಿ ಮುಡಾ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಿದ್ದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ಬುಧವಾರ ಬಂಧಿಸಿ ಬಿಡುಗಡೆ ಮಾಡಿದರು.
ಗನ್ಹೌಸ್ ಬಳಿ ಜಮಾಯಿಸಿದ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ‘ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಿನಾಮೆ ನೀಡಿ’, ‘ಮುಡಾದ 50:50 ಹಗರಣದಲ್ಲಿ ಭಾಗಿಯಾದವರಿಗೆ ಶಿಕ್ಷೆಯಾಗಲಿ’ ಎಂಬ ಘೋಷಣೆಗಳುಳ್ಳ ಫಲಕಗಳನ್ನು ಪ್ರದರ್ಶಿಸಿದರು. ಪಾದಯಾತ್ರೆ ಆರಂಭಿಸುತ್ತಿದ್ದಂತೆಯೇ ಪೊಲೀಸರು ತಡೆದು ಬಂಧಿಸಿದರು.
ಇನ್ನೊಂದೆಡೆ, ಬೇರೆ ಊರುಗಳಿಂದ ಬಂದ ಪ್ರತಿಭಟನಾಕಾರರು ರೈಲ್ವೆ ನಿಲ್ದಾಣದ ಬಳಿ ಒಟ್ಟು ಸೇರಿ ಮುಡಾ ಕಡೆಗೆ ಧಾವಿಸಿದರು. ರೋಟರಿ ಶಾಲೆ ವೃತ್ತದಲ್ಲಿ ಪೊಲೀಸರು ತಡೆದಾಗ ಮಾತಿನ ಚಕಮಕಿ ನಡೆಯಿತು. ಬ್ಯಾರಿಕೇಡ್ ದಾಟಿ ಮುನ್ನುಗ್ಗಲು ಯತ್ನಿಸಿದವರನ್ನು ಪೊಲೀಸರು ವಶಕ್ಕೆ ಪಡೆದರು.
ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ, ಉಪಾಧ್ಯಕ್ಷ ಎಸ್.ಎಚ್. ಲಿಂಗೇಗೌಡ, ಪ್ರಧಾನ ಕಾರ್ಯದರ್ಶಿ ಸಿ.ಎನ್. ದೀಪಕ್ ನೇತೃತ್ವ ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.