ADVERTISEMENT

ಮುಡಾ | ವರುಣ ಕ್ಷೇತ್ರದಲ್ಲಿ ಕಾಮಗಾರಿ: ವಿವರಣೆ ಕೇಳಿದ ರಾಜ್ಯಪಾಲರು

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2024, 12:52 IST
Last Updated 19 ಸೆಪ್ಟೆಂಬರ್ 2024, 12:52 IST
<div class="paragraphs"><p>ರಾಜ್ಯಪಾಲ ಥಾವರ ಚಂದ್ ಗೆಹಲೋತ್‌</p></div>

ರಾಜ್ಯಪಾಲ ಥಾವರ ಚಂದ್ ಗೆಹಲೋತ್‌

   

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ಹಾಗೂ ಕಾಂಗ್ರೆಸ್‌ನ ರಮೇಶ್ ಬಂಡಿಸಿದ್ದೇಗೌಡ ಪ್ರತಿನಿಧಿಸುವ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರಗಳಲ್ಲಿ ಮುಡಾದಿಂದ ಕೈಗೆತ್ತಿಕೊಳ್ಳಲಾದ ಕಾಮಗಾರಿಗಳ ವಿವರ ನೀಡುವಂತೆ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್‌ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಸೂಚಿಸಿದ್ದಾರೆ.

‘ಮುಡಾ ವ್ಯಾಪ್ತಿಯಲ್ಲಿ ಇಲ್ಲದಿದ್ದರೂ ಮುಖ್ಯಮಂತ್ರಿಯ ಮೌಖಿಕ ಸೂಚನೆ ಮೇರೆಗೆ ಈ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಮುಡಾ ಆರ್ಥಿಕ ಸಂಕಷ್ಟದಲ್ಲಿ ಇದ್ದರೂ ₹450 ಕೋಟಿ ಮೊತ್ತದ ಕಾಮಗಾರಿ ಕೈಗೊಂಡು ಅಧಿಕಾರ ದುರುಪಯೋಗಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಸಿಬಿಐ ತನಿಖೆ ನಡೆಸಬೇಕು’ ಎಂದು ಕೋರಿ ಮುಡಾದ ನಿವೃತ್ತ ಅಧಿಕಾರಿ ಪಿ.ಎಸ್. ನಟರಾಜು ಅವರು ರಾಜ್ಯಪಾಲರಿಗೆ ಆ.27ರಂದು ದೂರು ನೀಡಿದ್ದರು. ಈ ಸಂಬಂಧ ಅಗತ್ಯ ದಾಖಲೆಗಳೊಂದಿಗೆ ಶೀಘ್ರ ವರದಿ ಸಲ್ಲಿಸುವಂತೆ ರಾಜ್ಯಪಾಲರು ಸೆ.5ರಂದು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ’ ಎಂದು ತಿಳಿದುಬಂದಿದೆ.

ADVERTISEMENT

ಏನಿದೆ ದೂರಿನಲ್ಲಿ?:

‘ಮುಖ್ಯಮಂತ್ರಿ ಮೌಖಿಕ ಸೂಚನೆ ಮೇರೆಗೆ ವರುಣ ಕ್ಷೇತ್ರದ 24 ಗ್ರಾಮಗಳಲ್ಲಿ ಹಾಗೂ ಶ್ರೀರಂಗಪಟ್ಟಣ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ₹377 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಸಂಬಂಧ 2023ರ ಸೆ.6ರಂದು ನಡೆದ ಮುಡಾ ಸಾಮಾನ್ಯ ಸಭೆಯಲ್ಲಿ ವಿಷಯ ಮಂಡಿಸಲಾಗಿತ್ತು. ಈ ಸಂಬಂಧ ಸರ್ಕಾರದ ಮಾರ್ಗದರ್ಶನ ಕೋರಿ ಮುಡಾದಿಂದ ಪ್ರಸ್ತಾವ ಸಲ್ಲಿಸಲಾಗಿತ್ತು. ಈ ಕಾಮಗಾರಿಗಳನ್ನು ನಿರ್ವಹಿಸಲು ಸರ್ಕಾರವು ಎರಡೇ ತಿಂಗಳಲ್ಲಿ ಅನುಮೋದನೆ ನೀಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ’ ಎಂದು ನಟರಾಜು ದೂರಿನಲ್ಲಿ ವಿವರಿಸಿದ್ದಾರೆ.

‘ಮುಡಾ ವ್ಯಾಪ್ತಿಯಲ್ಲಿ ಬರದ ಪ್ರದೇಶಗಳ ಕಾಮಗಾರಿಗೆ ಅನುದಾನ ವಿನಿಯೋಗಿಸುವುದು ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ 1987ರ ಪರಿಚ್ಛೇದ 15 ಮತ್ತು 25ಕ್ಕೆ ವಿರುದ್ಧವಾಗಿದೆ. ಈ ಕಾಮಗಾರಿಗಳಿಗೆ ಒಪ್ಪಿಗೆ ನೀಡುವಾಗ ಅಧಿಕಾರಿಗಳು, ‘ಮುಖ್ಯಮಂತ್ರಿಯವರ ಮೌಖಿಕ ಸೂಚನೆ ಮೇರೆಗೆ’ ಎಂದು ಉಲ್ಲೇಖಿಸಿದ್ದಾರೆ. ಇದಲ್ಲದೆ ವರುಣ ಕ್ಷೇತ್ರಕ್ಕೆ ₹40 ಕೋಟಿ ಹಾಗೂ ಶ್ರೀರಂಗಪಟ್ಟಣ ಕ್ಷೇತ್ರಕ್ಕೆ ₹15 ಕೋಟಿ ಬಳಕೆಗೆ ಈಚೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದು ಕಾನೂನುಬಾಹಿರವಾಗಿದೆ. ಇದಕ್ಕೆ ಕಾರಣರಾದವರ ಮೇಲೆ ಕ್ರಮ ಕೈಗೊಳ್ಳಬೇಕು. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು’ ಎಂದು ಅವರು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.