ADVERTISEMENT

ತಪ್ಪು ಮಾಡಿ ಅಧಿಕಾರಿಗಳನ್ನು ಟೀಕಿಸುತ್ತಿರುವ ಕುಮಾರಸ್ವಾಮಿ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2024, 14:37 IST
Last Updated 29 ಸೆಪ್ಟೆಂಬರ್ 2024, 14:37 IST
ಸಿದ್ದರಾಮಯ್ಯ
ಸಿದ್ದರಾಮಯ್ಯ    

ಮೈಸೂರು: ‘ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಪ್ಪು ಮಾಡಿದ್ದಾರೆ. ಹೀಗಾಗಿ, ಅಧಿಕಾರಿಗಳನ್ನು ಟೀಕಿಸುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಇಲ್ಲಿ ಪತ್ರಕರ್ತರೊಂದಿಗೆ ಭಾನುವಾರ ಮಾತನಾಡಿದ ಅವರು, ‘ಅಧಿಕಾರಿಗಳ ಮೇಲೆ ಇನ್ನೇಕೆ ಟೀಕೆ ಮಾಡುತ್ತಿದ್ದಾರೆ? ಅಧಿಕಾರಿಗಳು ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸಿದರೆ ಟೀಕೆ ಮಾಡಲಿ’ ಎಂದರು.

‘ಲೋಕಾಯುಕ್ತ ವಿಶೇಷ ತನಿಖಾ ತಂಡದ ಎಡಿಜಿಪಿ ಎಂ.ಚಂದ್ರಶೇಖರ್‌ ಅವರ ವಿರುದ್ಧ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಅದಕ್ಕೆ ಪ್ರತಿಯಾಗಿ ಅಧಿಕಾರಿಯೂ ಉತ್ತರ ಕೊಟ್ಟಿದ್ದಾರೆ ಎಂಬುದಷ್ಟೆ ನನಗೆ ಗೊತ್ತು. ಆ ಬಗ್ಗೆ ಹೆಚ್ಚು ಪ್ರತಿಕ್ರಿಯಿಸುವುದಿಲ್ಲ’ ಎಂದು ಹೇಳಿದರು.

ADVERTISEMENT

‘ಆ ಅಧಿಕಾರಿಯು ಕುಮಾರಸ್ವಾಮಿ ಅವರನ್ನು ಹಂದಿ ಎಂದು ಕರೆದಿದ್ದಾರೆಯೇ ಅಥವಾ ಬರೆದಿದ್ದಾರೆಯೇ? ಅವರು ಬರೆದಿರುವ ಪತ್ರದಲ್ಲಿ ಸಾಹಿತ್ಯ ವಿಮರ್ಶಕ ಜಾರ್ಜ್‌ ಬರ್ನಾರ್ಡ್‌ ಶಾ ಅವರ ಮಾತುಗಳನ್ನು ಉಲ್ಲೇಖಿಸಿದ್ದಾರಷ್ಟೆ. ಆ ವಿಚಾರದ ಬಗ್ಗೆ ಸುದೀರ್ಘ ವಿವರಣೆ ನೀಡುವುದಿಲ್ಲ; ಅವರಿಬ್ಬರ ನಡುವೆ ಮಧ್ಯಪ್ರವೇಶವನ್ನೂ ಮಾಡುವುದಿಲ್ಲ. ಕುಮಾರಸ್ವಾಮಿ ಹೇಳಿಕೆಗಳಿಗೆ ನಾನು ಉತ್ತರ ಕೊಡುವುದಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.