ಮೈಸೂರು: ‘ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲೂ ‘ಸ್ವೀಪ್’ ಚಟುವಟಿಕೆಗಳನ್ನು ವಿನೂತನವಾಗಿ ನಡೆಸಿ ಮತದಾರರಲ್ಲಿ ಜಾಗೃತಿ ಮೂಡಿಸಬೇಕು ಮತ್ತು ಮತದಾನ ಪ್ರಮಾಣ ಹೆಚ್ಚಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ. ಗಾಯಿತ್ರಿ ತಿಳಿಸಿದರು.
ಸ್ವೀಪ್ (ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣೆಯಲ್ಲಿ ಪಾಲ್ಗೊಳ್ಳುವಿಕೆ) ಚಟುವಟಿಕೆಯಡಿ ತಾಲ್ಲೂಕು ಸಮಿತಿಯಿಂದ ಇಲ್ಲಿನ ಮಿನಿ ವಿಧಾನಸೌಧದ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ಹಸ್ತಾಕ್ಷರ ಸಂಗ್ರಹ ಅಭಿಯಾನ’ಕ್ಕೆ ಸಹಿ ಹಾಕುವ ಮೂಲಕ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು.
‘ಗ್ರಾಮೀಣ ಭಾಗದ ಅರ್ಹರೆಲ್ಲರೂ ಏ.26ರಂದು ಮತದಾನ ಮಾಡುವಂತೆ ಪ್ರೇರೇಪಿಸಬೇಕು’ ಎಂದರು.
‘ಚುನಾವಣೆ ಸಿದ್ಧತೆಯ ಜೊತೆಗೆ ಕುಡಿಯುವ ನೀರು ಸಮರ್ಪಕ ಪೂರೈಕೆಗೆ ಆದ್ಯತೆ ನೀಡಬೇಕು. ಬರಗಾಲ ಇರುವುದರಿಂದಾಗಿ, ನರೇಗಾ ಯೋಜನೆಯಡಿ ಹೆಚ್ಚಿನ ಜನರಿಗೆ ಉದ್ಯೋಗ ಕಲ್ಪಿಸಿ ಗುಳೇ ಹೋಗುವುದನ್ನು ತಡೆಗಟ್ಟಬೇಕು’ ಎಂದು ಸೂಚಿಸಿದರು.
ಸಹಾಯಕ ಸ್ವೀಪ್ ನೋಡಲ್ ಅಧಿಕಾರಿ ಶಾಂತಾ ಎಂ., ತಾಲ್ಲೂಕು ಪಂಚಾಯತ್ ಇಒ ಎಸ್.ಪಿ.ಧರಣೇಶ್, ಅನುಷ್ಠಾನ ಇಲಾಖೆಯ ತಾಲ್ಲೂಕು ಮಟ್ಟದ ಅಧಿಕಾರಿಗಳು, ತಾ.ಪಂ. ಸಹಾಯಕ ನಿರ್ದೇಶಕಿ ಭವ್ಯಾ, ಗಂಗಾಧರ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.