ADVERTISEMENT

ಅರ್ಜುನ ಆನೆಗೆ ಎರಡು ಸ್ಮಾರಕ: ಖಂಡ್ರೆ

​ಪ್ರಜಾವಾಣಿ ವಾರ್ತೆ
Published 15 ಜೂನ್ 2024, 19:56 IST
Last Updated 15 ಜೂನ್ 2024, 19:56 IST
ಈಶ್ವರ ಖಂಡ್ರೆ
ಈಶ್ವರ ಖಂಡ್ರೆ   

ಮೈಸೂರು: ‘ಅರ್ಜುನ ಆನೆ ಸಾವನ್ನಪ್ಪಿದ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಹಾಗೂ ಅದು ವಾಸವಿದ್ದ ಎಚ್‌.ಡಿ.ಕೋಟೆ ತಾಲ್ಲೂಕಿನ ಬಳ್ಳೆ ಆನೆ ಶಿಬಿರದಲ್ಲಿ ಸ್ಮಾರಕ ನಿರ್ಮಾಣಕ್ಕೆ ಹದಿನೈದು ದಿನದೊಳಗೆ ಶಂಕುಸ್ಥಾಪನೆ ಮಾಡಲಾಗುವುದು’ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಮೃಗಾಲಯದಲ್ಲಿ ಶನಿವಾರ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ‘ಪುಂಡಾನೆಗಳ ನಿಯಂತ್ರಣಕ್ಕೆ ಸಾಕಾನೆಗಳನ್ನು ಕಳಿಸಿಕೊಡುವಂತೆ ಆಂಧ್ರಪ್ರದೇಶ ಸರ್ಕಾರ ಮನವಿ ಮಾಡಿದೆ. ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು. ದಸರಾ ಆನೆಗಳನ್ನು ಯಾರಿಗೂ, ಎಲ್ಲಿಗೂ ಕೊಡುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

‘ಅಶ್ವತ್ಥಾಮ ಆನೆಯ ಸಾವಿನ ಕುರಿತು ಹಿರಿಯ ಅಧಿಕಾರಿಗಳ ಸಮಿತಿ ತನಿಖೆ ನಡೆಸುತ್ತಿದೆ. ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ರೀತಿಯ ಘಟನೆ ಮರುಕಳಿಸದಂತೆ ಶಾಶ್ವತ ಕ್ರಮಕ್ಕೆ ಪ್ರಯತ್ನಿಸಲಾಗುವುದು’ ಎಂದರು.

ADVERTISEMENT

‘ಚಾಮುಂಡಿ ಬೆಟ್ಟಕ್ಕೆ ರೋಪ್‌ ವೇ ನಿರ್ಮಿಸುವ ನಿಟ್ಟಿನಲ್ಲಿ ಪರಿಸರವಾದಿಗಳೊಂದಿಗೆ ಚರ್ಚಿಸಿ, ಪರಿಸರಕ್ಕೆ ಹಾನಿಯಾಗದಂತೆ ಕಾರ್ಯ ಯೋಜನೆ ರೂಪಿಸಲಾಗುವುದು. ಸುಸ್ಥಿರ ಅಭಿವೃದ್ಧಿಗೆ ಜೀವನ ಹಾಗೂ ಜೀವನೋಪಾಯ ಎರಡೂ ಬೇಕು. ಪರಿಸರ ರಕ್ಷಣೆಗೆ ಮೊದಲ ಆದ್ಯತೆ ನೀಡಿ, ಅಭಿವೃದ್ಧಿಯ ಬಗ್ಗೆ ತೀರ್ಮಾನಿಸಲಾಗುವುದು. ಯಾರೂ ಆತಂಕ ಪಡಬೇಕಾಗಿಲ್ಲ’ ಎಂದರು.

ಮೈಸೂರು ಮೃಗಾಲಯವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿಪಡಿಸಲಾಗುವುದು. ಪರಿಸರ ವನ್ಯಜೀವಿ ರಕ್ಷಣೆಗೆ ಸಹಕಾರಿಯಾಗುವಂತೆ ಕಾರ್ಯಕ್ರಮ ರೂಪಿಸಲಾಗುವುದು
- ಈಶ್ವರ ಖಂಡ್ರೆ ಅರಣ್ಯ ಮತ್ತು ಪರಿಸರ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.