ಮೈಸೂರು: ‘ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಯಾವುದೇ ಆಧಾರವಿಲ್ಲದೆ, ಸಿಡಿ ಶಿವು ಎನ್ನುತ್ತಾ ತೇಜೋವಧೆ ಮಾಡುತ್ತಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರ ನಡೆ ಖಂಡನೀಯ. ಇಂಥ ಸುಳ್ಳು ಆರೋಪಗಳನ್ನು ಮುಂದುವರಿಸಿದರೆ ಪೊಲೀಸ್ ಠಾಣೆಗೆ ದೂರು ನೀಡಬೇಕಾಗುತ್ತದೆ’ ಎಂದು ನಗರ ಕಾಂಗ್ರೆಸ್ ವಕ್ತಾರ ಎಸ್.ರಾಜೇಶ್ ಎಚ್ಚರಿಸಿದರು.
ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅನ್ಯಾಯಕ್ಕೊಳಗಾದ ಸಂತ್ರಸ್ತೆಯರ ಪರ ಮಾತನಾಡದ ಕುಮಾರಸ್ವಾಮಿ ಅವರು ಕೆಳಮಟ್ಟದ ರಾಜಕಾರಣದಲ್ಲಿ ತೊಡಗಿದ್ದಾರೆ. ಅವರು ಪ್ರಾಮಾಣಿಕರಾಗಿದ್ದರೆ, ಸಂಸತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಹಾಗೂ ಪೊಲೀಸರಿಗೆ ಶರಣಾಗುವಂತೆ ಪ್ರಜ್ವಲ್ಗೆ ಸೂಚಿಸಲಿ’ ಎಂದು ಆಗ್ರಹಿಸಿದರು.
‘ವಿದೇಶ ಪ್ರವಾಸದ ವೇಳೆ ಅನಾರೋಗ್ಯ ಉಂಟಾಗಿ ಮೃತಪಟ್ಟ ರಾಕೇಶ್ ಸಿದ್ದರಾಮಯ್ಯ ಅವರ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು. ಸಾಧ್ಯವಾದರೆ, ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ಮತ್ತು ಪ್ರಜ್ವಲ್ ಬಂಧನಕ್ಕಾಗಿ ಕೇಂದ್ರಕ್ಕೆ ಒತ್ತಡ ಹೇರಲಿ’ ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ನಗರ ಕಾಂಗ್ರೆಸ್ ವಕ್ತಾರ ಟಿ.ಶ್ರೀನಿವಾಸ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.