ಲಿಂಗಸುಗೂರು: ‘ರಾಜ್ಯ ಸರ್ಕಾರ ಏಳನೇ ವೇತನ ಆಯೋಗದ ವರದಿಯನ್ನು ಜೂನ್ ಅಂತ್ಯದೊಳಗೆ ಯಥಾವತ್ತಾಗಿ ಅನುಷ್ಠಾನಕ್ಕೆ ಉದಾಸೀನ, ವಿಳಂಬ ಧೋರಣೆ ಅನುಸರಿಸಿದರೆ ಹೋರಾಟ ನಡೆಸುವುದು ಅನಿವಾರ್ಯ’ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದರು.
ಭಾನುವಾರ ನೌಕರರ ಸಂಘದ ವಾರ್ಷಿಕ ಮಹಾಸಭೆ ಮತ್ತು ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,‘ರಾಜ್ಯ ಸರ್ಕಾರ ಹೊಸ ಪಿಂಚಣಿ ಯೋಜನೆ ರದ್ದುಪಡಿಸಿ, ಹಳೆ ಪಿಂಚಣಿ ಯೋಜನೆ ಜಾರಿಗೆ ತರುವ ಭರವಸೆ ನೀಡಿದೆ. ಇದರ ಜೊತೆಗೆ ನೌಕರರಿಗೆ ಉಚಿತ ಆರೋಗ್ಯ ಯೋಜನೆ ಜಾರಿಗೆ ಮುಂದಾಗಬೇಕಿದೆ. ತಮ್ಮ ಅವಧಿಯಲ್ಲಿ 25ಕ್ಕೂ ಹೆಚ್ಚು ವಿಶೇಷ ಆದೇಶಗಳ ಮೂಲಕ ಸ್ಪಂದಿಸುವ ಕೆಲಸ ಮಾಡಿರುವೆ’ ಎಂದರು.
‘ರಾಜ್ಯದಲ್ಲಿ ಏಳೂವರೆ ಲಕ್ಷ ನೌಕರರು ಕೆಲಸ ಮಾಡುವಲ್ಲಿ ಕೇವಲ 2.13 ಲಕ್ಷ ನೌಕರರು ಕೆಲಸ ಮಾಡುತ್ತಿದ್ದೇವೆ. 2.5 ಲಕ್ಷ ಹುದ್ದೆಗಳು ಖಾಲಿ ಉಳಿದಿವೆ. ಸರ್ಕಾರ ಖಾಲಿ ಇರುವ ಹುದ್ದೆಗಳನ್ನು ಪೂರ್ಣ ಪ್ರಮಾಣದಲ್ಲಿ ಭರ್ತಿ ಮಾಡಬೇಕು. ವಿವಿಧ ಇಲಾಖೆ ಸಮಸ್ಯೆಗಳು ಹಾಗೂ ಅಗತ್ಯ ಸೌಲಭ್ಯ ಕಲ್ಪಿಸಲು ಮುಂದಾಗಬೇಕು’ ಎಂದು ಒತ್ತಾಯಿಸಿದರು.
ರಾಜ್ಯ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಬಳ್ಳಾರಿ, ಜಿಲ್ಲಾ ಕಾರ್ಯದರ್ಶಿ ಮಹಾಂತೇಶ ಬಿರಾದಾರ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ ಯಾದವ ಮಾತನಾಡಿದರು.
ಕಾರ್ಯಾಗಾರ-ಪುರಸ್ಕಾರ: ಸಹಕಾರಿ ಸಂಘಗಳ ಸಹಾಯಕ ನಿರ್ದೇಶಕ ಚಂದ್ರಶೇಖರ ಕುಂಬಾರ ನೌಕರರ ಕಾರ್ಯಕ್ಷಮತೆ ಮತ್ತು ದಕ್ಷತೆಯ ಬಗ್ಗೆ ಮಾಹಿತಿ ನೀಡಿದರು. ಅಧ್ಯಕ್ಷ ಅವಧಿಯಲ್ಲಿ ನಿವೃತ್ತರಾದ ಜಿಲ್ಲಾ ಘಟಕ ಅಧ್ಯಕ್ಷ ಭೀಮಣ್ಣ ನಾಯಕ, ಮಾನ್ವಿ ತಾಲ್ಲೂಕು ಘಟಕ ಅಧ್ಯಕ್ಷ ಶ್ರೀಶೈಲಗೌಡ, ಸಿರವಾರ ತಾಲ್ಲೂಕು ಘಟಕ ಅಧ್ಯಕ್ಷ ಅಯ್ಯನಗೌಡ ಏರಡ್ಡಿ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ನಿವೃತ್ತಿ ಹೊಂದಿದ ನೌಕರರು ಹಾಗೂ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಲ್ಲಿಸಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಹೊಂಬಣ್ಣ ರಾಠೋಡ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಶರಣಗೌಡ ಪಾಟೀಲ ಉದ್ಘಾಟಿಸಿದರು. ತಾಲ್ಲೂಕು ಘಟಕ ಅಧ್ಯಕ್ಷ ಹಾಜಿಬಾಬು, ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ, ರಾಜ್ಯ ಹಿರಿಯ ಉಪಾಧ್ಯಕ್ಷ ಎಂ.ವಿ. ರುದ್ರಪ್ಪ, ರಾಜ್ಯ ಜಂಟಿ ಕಾರ್ಯದರ್ಶಿ ಚಂದ್ರಶೇಖರ ಹಿರೇಮಠ, ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಶಂಕರಗೌಡ ಪಾಟೀಲ, ಮಲ್ಲಯ್ಯ ಮುರಾರಿ, ರಾಯಪ್ಪಗೌಡ ಹುಡೇದ, ಮುಖಂಡರಾದ ಮಹಾದೇವಪ್ಪಗೌಡ ಮಸ್ಕಿ, ಪಾಮಯ್ಯ ಮುರಾರಿ, ಅಮರೇಶಪ್ಪ ಹೂನೂರು, ಮುತ್ತಣ್ಣ ಕಮದತ್ತ, ಹನುಮಂತಪ್ಪ ಕುಳಗೇರಿ, ಅಮರೇಶ ಸಾಲಿ, ರಂಗಪ್ಪ, ವೀರನಗೌಡ, ಶರಣಬಸವ, ಚಂದ್ರಶೇಖರರೆಡ್ಡಿ ಸೇರಿದಂತೆ ವಿವಿಧ ತಾಲ್ಲೂಕು ಘಟಕಗಳ ಅಧ್ಯಕ್ಷರು, ಜಿಲ್ಲಾ ಮತ್ತು ತಾಲ್ಲೂಕು ಪದಾಧಿಕಾರಿಗಳು ಹಾಜರಿದ್ದರು.
ನ್ಯಾಯಾಂಗ ಶಾಸಕಾಂಗದ ಜೊತೆಗೆ ಕಾರ್ಯಾಂಗದ ಕೆಲಸ ಮಹತ್ವ ಪಡೆದುಕೊಂಡಿದೆ. ಸರ್ಕಾರಿ ನೌಕರರ ಕಾರ್ಯಕ್ಷಮತೆ ಮತ್ತು ದಕ್ಷತೆಯಿಂದ ಕಾರ್ಯಾಂಗದ ಘನತೆ ಹೆಚ್ಚಿಸಿ.ಶರಣಗೌಡ ಪಾಟೀಲ ಬಯ್ಯಾಪುರ ವಿಧಾನ ಪರಿಷತ್ ಸದಸ್ಯ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.