ರಾಯಚೂರು: ‘ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿಯೇ ರಾಯಚೂರು ಜಿಲ್ಲೆ ಅಪಘಾತ ಮರಣ ಪ್ರಮಾಣ ಕಡಿಮೆ ಮಾಡಿದ್ದು, ಶೇ 20ರಷ್ಟು ಅಪಘಾತ ಮರಣ ಪ್ರಮಾಣ ಜಿಲ್ಲೆಯಲ್ಲಿ ಕಡಿಮೆಯಾಗಿವೆ. ಸಾರ್ವಜನಿಕರು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿದರೆ ಹೆಚ್ಚಿನ ಅಪಘಾತ ತಪ್ಪಿಸಬಹುದಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ ತಿಳಿಸಿದರು.
ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆಯ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಗುರುವಾರ ನಡೆದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
ರಸ್ತೆ ಸುರಕ್ಷತೆ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಿ ನಿಯಮಗಳನ್ನು ಪಾಲನೆ ಮಾಡಬೇಕು. ಅಂದಾಗ ಮಾತ್ರ ಅಪಘಾತಗಳನ್ನು ತಪ್ಪಿಸಬಹುದಾಗಿದೆ. ಈ ದಿಸೆಯಲ್ಲಿ ತಮ್ಮ ಸುತ್ತಮುತ್ತಲಿನ ಜನರಿಗೆ ನಿಯಮಗಳ ಕುರಿತು ಹೆಚ್ಚಿನ ಜಾಗೃತಿ ಮೂಡಿಸಲು ಮುಂದಾಗಬೇಕು ಎಂದು ಹೇಳಿದರು.
ಪ್ರಾದೇಶಿಕ ಸಾರಿಗೆ ಅಧಿಕಾರಿ ವಿನಯಾ.ಕೆ ಮಾತನಾಡಿ, ಸಾರ್ವಜನಿಕರು ರಸ್ತೆ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ಮುಂಜಾಗೃತಾ ಕ್ರಮಗಳನ್ನು ವಹಿಸಬೇಕು ಎಂದರು.
ಈ ವೇಳೆ ಜಿಲ್ಲಾಧಿಕಾರಿ ಎಲ್ ಚಂದ್ರಶೇಖರ ನಾಯಕ, ಎಎಸ್ಪಿ ಡಾ.ಶಿವಕುಮಾರ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸೋಮಶೇಖರಪ್ಪ ಹೊಕ್ರಾಣಿ, ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿ ನಾಗವಂದ, ಅರ್ಜುನ, ಜೀನತ್ ಸಾಜೀದ್, ಸಾಜೀದ್ ಹುಸೇನ್, ಸುಧಾ ಪರಿಮಳ, ಅನಿತಾ, ಪವನ್, ಅರ್ಜುನ ಚೌಹಾಣ, ನಟರಾಜ, ರವಿಕಿರಣ, ಶಿವಶಂಕರ, ಸಿಬ್ಬಂದಿಗಳಾದ ಶಿವಾನಂದ, ಶಶಿಕಲಾ, ಆಶಿಯಾ, ಮರಿಯಮ್ಮ, ಗುರುಮೂರ್ತಿ, ಮಂಜುನಾಥ, ಜ್ಯೋತಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.