ರಾಯಚೂರು: ನಗರದ ಸೌಂದರ್ಯೀಕರಣ, ಬೀದಿ ದೀಪಗಳ ಅಳವಡಿಕೆ, ಉದ್ಯಾನವನಗಳ ಅಭಿವೃದ್ಧಿಗೆ ₹14 ಕೋಟಿ ಬಜೆಟ್ ಶಾಸಕ ಡಾ.ಶಿವರಾಜ ಪಾಟೀಲ ಅಧ್ಯಕ್ಷತೆಯಲ್ಲಿ ನಡೆದ ನಗರಾಭಿವೃದ್ಧಿ (ರುಡಾ) ಸಭೆಯಲ್ಲಿ ಅನುಮೋದನೆ ನೀಡಲಾಯಿತು.
ನಗರದ ರಾಯಚೂರು ನಗರಾಭಿವೃದ್ಧಿ (ಆರ್ಡಿಎ) ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಇದರ ಜೊತೆಗೆ ಪರಿಷ್ಕೃತ ಮಾಸ್ಟರ್ ಪ್ಲಾನ್ ರೂಪಿಸುವುದು ಸೇರಿ ವಿವಿಧ ಅಭಿವೃದ್ಧಿ ಕೆಲಸಗಳ ಕುರಿತು ತೀರ್ಮಾನ ತೆಗೆದುಕೊಳ್ಳಲಾಯಿತು.
ಶಾಸಕ ಡಾ.ಶಿವರಾಜ ಪಾಟೀಲ, ‘ಪ್ರಾಧಿಕಾರದ ಆಡಳಿತಾತ್ಮಕ ವೆಚ್ಚ ಹಾಗೂ ಸಂಗ್ರಹಗೊಂಡಿರುವ ಆದಾಯದ ಮೂಲ ಸೇರಿ ಸರ್ಕಾರದಿಂದ ಮಂಜೂರಾದ ಅನುದಾನವನ್ನು ಸಮರ್ಪಕವಾಗಿ ವೆಚ್ಚ ಮಾಡುವುದಕ್ಕೆ ಅಗತ್ಯ ಕ್ರಿಯಾ ಯೋಜನೆ ರೂಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
‘ನಗರದ ಸಮಗ್ರ ಅಭಿವೃದ್ಧಿಯ ದೃಷ್ಠಿಕೋನದಿಂದ ಈ ಹಿಂದೆ ರೂಪಿಸಲಾಗಿದ್ದ ಮಾಸ್ಟರ್ ಪ್ಲಾನ್ ಯೋಜನೆಗೆ ಉಂಟಾಗಿರುವ ತಾಂತ್ರಿಕ ಸಮಸ್ಯೆಯನ್ನು ನಿವಾರಿಸಿಕೊಂಡು ಪರಿಷ್ಕೃತ ಯೋಜನೆ ರೂಪಿಸಿ ವರದಿ ಸಿದ್ಧಪಡಿಸಬೇಕು’ ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ ಮಾತನಾಡಿ, ಭವಿಷ್ಯದಲ್ಲಿ ನಗರದ ಜನಸಂಖ್ಯೆಯ ಬೆಳವಣಿಗೆಯನ್ನು ದೃಷ್ಠಿಯಲ್ಲಿಟ್ಟುಕೊಂಡು ಪರಿಷ್ಕೃತ ಮಾಸ್ಟರ್ ಪ್ಲಾನ್ ರೂಪಿಸುವ ಅಗತ್ಯವಿದೆ. ಈ ದಿಸೆಯಲ್ಲಿ ಸರಿಯಾಗಿ ಯೋಜನೆ ರೂಪಿಸಬೇಕು’ ಎಂದು ಹೇಳಿದರು.
ಸಭೆಯಲ್ಲಿ ಆರ್ಡಿಎ ಅಧ್ಯಕ್ಷ ರಾಜಶೇಖರ ರಾಮಸ್ವಾಮಿ, ಆಯುಕ್ತ ಜಿಲಾನಿ, ಸದಸ್ಯರು, ಅಧಿಕಾರಿ, ಸಿಬ್ಬಂದಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.