ಲಿಂಗಸುಗೂರು: ‘ರಾಯಚೂರು ಹಾಗೂ ಕೊಪ್ಪಳ ಲೋಕಸಭಾ ಕ್ಷೇತ್ರದ ಜಿ.ಕುಮಾರ ನಾಯಕ ಹಾಗೂ ರಾಜಶೇಖರ ಹಿಟ್ನಾಳ ಗೆಲುವಿಗೆ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಮರೇಗೌಡ ಪಾಟೀಲ ಬಯ್ಯಾಪುರ, ರಾಯಚೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಪರಿಶ್ರಮವೂ ಒಂದು ಕಾರಣ’ ಎಂದು ವಿಧಾನ ಪರಿಷತ್ ಸದಸ್ಯ ಶರಣಗೌಡ ಪಾಟೀಲ ಬಯ್ಯಾಪುರ ಹೇಳಿದರು.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಲ್ಯಾಣ ಕರ್ನಾಟಕ ಪ್ರದೇಶದ ಐದು ಕ್ಷೇತ್ರಗಳ ಅಭ್ಯರ್ಥಿಗಳ ಗೆಲುವಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮಾರ್ಗದರ್ಶನವಿದೆ. ಸಚಿವರಾದ ಶರಣಬಸಪ್ಪ ದರ್ಶನಾಪುರ, ಶಿವರಾಜ ತಂಗಡಗಿ, ಎನ್.ಎಸ್.ಬೋಸರಾಜು ಅವರು ಕೂಡ ಸಂಘಟಿತವಾಗಿ ಕೆಲಸ ಮಾಡಿದ್ದಾರೆ. ಅಲ್ಲದೆ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸಾಥ್ ನೀಡಿವೆ’ ಎಂದರು.
‘ಲೋಕಸಭಾ ಸದಸ್ಯರ ಸಹಯೋಗದಲ್ಲಿ ಈ ಭಾಗದ ಅಭಿವೃದ್ಧಿಗೆ ಶ್ರಮಿಸೋಣ. ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ನಿಷ್ಠೆ ಇದ್ದ ಪ್ರಮುಖರನ್ನು ಆಹ್ವಾನಿಸುವಲ್ಲಿ ವಿಫಲರಾಗಿದ್ದೇವೆ. ಈ ಚುನಾವಣೆಯಲ್ಲಿ ಎಲ್ಲ ಪ್ರಮುಖರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದರಿಂದ ಗೆಲವು ಸುಲಭವಾಯಿತು. ಭವಿಷ್ಯದಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಸಂಘಟಿತರಾಗಿ ಶ್ರಮಿಸಬೇಕಿದ್ದು, ಗೆಲುವಿಗೆ ಶ್ರಮಿಸಿದ ಸರ್ವರಿಗೂ ಕೃತಜ್ಞತೆಗಳು’ ಎಂದು ಹೇಳಿದರು.
ಮುಖಂಡರಾದ ಪಾಮಯ್ಯ ಮುರಾರಿ, ಭೂಪನಗೌಡ ಕರಡಕಲ್ಲ, ಮಲ್ಲಣ್ಣ ವಾರದ, ಸೋಮಶೇಖರ ಐದನಾಳ, ಬಸವರಾಜಗೌಡ ಗಣೆಕಲ್ಲ, ಗುಂಡಪ್ಪ ನಾಯಕ ಹಾಗೂ ಅನೀಶ್ ಪಾಷಾ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.