ರಾಯಚೂರು: ‘ಮಾನ್ವಿ ತಾಲ್ಲೂಕಿನ ಯಕ್ಲಾಸಪುರ ಗ್ರಾಮದ ಕೆರೆಯ ಒಡ್ಡು ದುರಸ್ತಿಗೊಳಿಸಬೇಕು’ ಎಂದು ಯಕ್ಲಾಸಪುರ ಗ್ರಾಮದ ಗಂಗಿ ಮಾಳಮ್ಮ ಕೆರೆ ಬಳಕೆದಾರರ ಸಂಘದ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.
ಯಕ್ಲಾಸಪುರ ಗ್ರಾಮದಲ್ಲಿರುವ ಸುಮಾರು 250 ಎಕರೆ ಪ್ರದೇಶದ ಈ ಕೆರೆ ಮಳೆಗಾಲದಲ್ಲಿ ಭರ್ತಿಯಾಗಿ ಕೆರೆಯ ಒಡ್ಡು ಒಡೆದು ಕೆರೆ ಕೆಳ ಭಾಗದಲ್ಲಿರುವ ರೈತರ ಜಮೀನುಗಳಿಗೆ ನೀರು ನುಗ್ಗಿ ಸಮಸ್ಯೆಯಾಗುತ್ತದೆ. ಈ ಬಗ್ಗೆ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ಜಿಲ್ಲಾಡಳಿತಕ್ಕೆ ಸಲ್ಲಿಸಿದ ಮನವಿಯಲ್ಲಿ ದೂರಿದ್ದಾರೆ.
ಕೆರೆಯ ಅಭಿವೃದ್ಧಿಗಾಗಿ ₹40 ಲಕ್ಷ ಅನುದಾನ ಮಂಜೂರಾಗಿತ್ತು. ಕಳಪೆ ಮಟ್ಟದ ಕಾಮಗಾರಿ ನಿರ್ವಹಿಸಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಸೇರಿ ಬೋಗಸ್ ಬಿಲ್ ಮಾಡಿಕೊಂಡು ರೈತರಿಗೆ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಕೂಡಲೇ ಈ ಬಗ್ಗೆ ತನಿಖೆ ನಡೆಸಿ ಕೆರೆಯ ಒಡ್ಡು ದುರಸ್ತಿಗೆ ಮುಂದಾಗಬೇಕು. ನಿರ್ಲಕ್ಷ್ಯವಹಿಸಿದರೆ ರೈತರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.
ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಮುಖಂಡರಾದ ಬಸವರಾಜ, ಪ್ರಕಾಶ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.