ಮಾನ್ವಿ: ನೀಟ್ ಪರೀಕ್ಷಾ ಅಕ್ರಮ ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಮಂಗಳವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಪಟ್ಟಣದ ಬಸವ ವೃತ್ತದಿಂದ ತಹಶೀಲ್ದಾರ್ ಕಚೇರಿ ವರೆಗೆ ಮೆರವಣಿಗೆಯಲ್ಲಿ ತೆರಳಿದ ವಿದ್ಯಾರ್ಥಿಗಳು ಅಕ್ರಮ ವಿರೋಧಿಸಿ ಘೋಷಣೆ ಕೂಗಿದರು.
‘ನೀಟ್ ಪ್ರಶ್ನೆ ಪತ್ರಿಕೆಗಳ ಸೋರಿಕೆಯಲ್ಲಿ ಭಾಗಿಯಾದ ಎಲ್ಲರಿಗೂ ಕಠಿಣ ಶಿಕ್ಷೆ ನೀಡಬೇಕು. ಉನ್ನತ ಶಿಕ್ಷಣ ಪ್ರವೇಶಕ್ಕೆ ನಡೆಸುವ ಕೇಂದ್ರಿಕೃತ ಪರೀಕ್ಷೆಗಳನ್ನು ರದ್ದುಪಡಿಸಬೇಕು. ನೀಟ್ನಿಂದ ನಮ್ಮ ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದ್ದು, ಈ ಪರೀಕ್ಷೆಯನ್ನು ಕರ್ನಾಟಕದಲ್ಲಿ ನಿಷೇಧ ಮಾಡಿ ಮೊದಲಿನಂತೆ ಕೆ–ಸಿಇಟಿ ಪರೀಕ್ಷೆ ಮೂಲಕ ಆಯ್ಕೆ ಮಾಡಬೇಕು. ನೀಟ್ ಅಕ್ರಮದ ನೈತಿಕ ಹೊಣೆ ಹೊತ್ತು ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಒತ್ತಾಯಿಸಲಾಯಿತು.
ರಾಷ್ಟ್ರಪತಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ರಾಜು ಪಿರಂಗಿ ಅವರಿಗೆ ಸಲ್ಲಿಸಲಾಯಿತು.
ಎಸ್ಐಒ ವಿದ್ಯಾರ್ಥಿ ಸಂಘಟನೆಯ ರಾಜ್ಯ ಅಧ್ಯಕ್ಷ ಜಿಶಾನ್ ಅಖಿಲ್ ಸಿದ್ದಿಖಿ, ಹೈದರಾಬಾದ್ ಕರ್ನಾಟಕ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಮಲ್ಲೇಶ್ ಮಾಚನೂರು, ವಂದೇ ಮಾತರಂ ಯುವ ಸಂಘದ ಅಧ್ಯಕ್ಷ ಮಹಿಬೂಬ್ ಮದ್ಲಾಪುರ, ಬಿವಿಎಸ್ ಸಂಘಟನೆಯ ತಾಲ್ಲೂಕು ಅಧ್ಯಕ್ಷ ಸುರೇಶ ಬೈಲ್ ಮರ್ಚೇಡ್ , ದಲಿತ ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷ ಬಂಡೆಗುರು ಕರೆಗುಡ್ಡ, ಯುವ ಮುಖಂಡ ಮೊಹಮ್ಮದ್ ಬೇಗ್, ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.