ರಾಯಚೂರು: ವಿಶ್ವಕರ್ಮ ಸಮುದಾಯವನ್ನು ಹಿಂದುಳಿದ(2ಎ) ವರ್ಗದಿಂದ ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ಅಖಿಲ ಕರ್ನಾಟಕ ವಿಶ್ವಕರ್ಮಾ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬ್ರಹ್ಮಗಣೇಶ ಒತ್ತಾಯಿಸಿದರು.
ಹೊಸ ತಂತ್ರಜ್ಞಾನದಿಂದಾಗಿ ನಮ್ಮ ಕುಲಕಸುಬುಗಳು ನಶಿಸಿ ಹೋಗುವ ಪರಿಸ್ಥಿತಿ ಬಂದಿದೆ. ವಿಶ್ವಕರ್ಮ ಸಮಾಜದ ಸ್ಥಿತಿಗಳನ್ನು ಪರಿಶೀಲಿಸಲು ಕುಲಶಾಸ್ತ್ರ ಅಧ್ಯಯನ ಮಾಡಲು ಮೈಸೂರು ವಿಶ್ವವಿದ್ಯಾಲಯ ಒಪ್ಪಿಗೆ ನೀಡಿದೆ ಎಂದು ನಗರದಲ್ಲಿ ಗುರುವಾರ ಮಾಧ್ಯಮ ಗೋಷ್ಠಿಯಲ್ಲಿ ತಿಳಿಸಿದರು.
ಮೈಸೂರು ವಿಶ್ವವಿದ್ಯಾಲಯದ ಪ್ರೊ.ನಂಜುಂಡ ಹಾಗೂ ಮಹಾದೇವನ್ ಅವರು ಸಮಾಜದ ಸ್ಥಿತಿಗತಿ ಅರಿಯಲು ರಾಯಚೂರಿಗೆ ಬರುತ್ತಿದ್ದಾರೆ. ಜ.21ಕ್ಕೆ ಮಧ್ಯಾಹ್ನ 1 ಗಂಟೆಗೆ ರಾಯಚೂರಿನ ಅಂಬೇಡ್ಕರ್ ವೃತ್ತದಲ್ಲಿರುವ ಸರ್ಕಾರಿ ನೌಕರರ ಭವನದಲ್ಲಿ ಸಭೆಯನ್ನೂ ಆಯೋಜಿಸಲಾಗಿದೆ. ಸಮಾಜದ ಬಂಧುಗಳು ಸಭೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ವಿಶ್ವಕರ್ಮ ಸಮುದಾಯದಲ್ಲಿ ಅಕ್ಕಸಾಲಿ, ಆಚಾರಿ, ವಿಶ್ವಬ್ರಾಹ್ಮಣ, ಸೋನಾರ್, ದೈವಜ್ಞ ಬ್ರಾಹ್ಮಣ ಹೀಗೆ 41 ಉಪ ಜಾತಿಗಳಿವೆ. ವಿಶ್ವ ಅಭಿವೃದ್ಧಿ ನಿಗಮ ಸ್ಥಾಪಿಸಿದರೂ ಸಮುದಾಯಕ್ಕೆ ಹೆಚ್ಚಿನ ಪ್ರಯೋಜನವಾಗಿಲ್ಲ. ಪರಿಶಿಷ್ಠ ಪಂಗಡಕ್ಕೆ ಸೇರಿದರೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದರು.
ಚಾಮರಾಜನಗರದ ಕೊಳ್ಳೇಗಾಲದಲ್ಲಿ ಈಗಾಗಲೇ ಕಮ್ಮಾರರಿಗೆ ಪರಿಶಿಷ್ಠ ಪಂಗಡದ ಜಾತಿ ಪ್ರಮಾಣಪತ್ರ ಕೊಡಲಾಗಿದೆ. ಇದನ್ನು ಎಲ್ಲ ಜಿಲ್ಲೆಗಳಲ್ಲೂ ಕೊಡುವಂತೆ ಆಗಬೇಕು ಎಂದು ಆಗ್ರಹಿಸಿದರು,
ನರಸಪ್ಪ ಬಡಿಗೇರ, ಮನೋಹರ, ರಾಮು ಗಾಣದಾಳ್, ನಾಗರಾಜ್ ಪತ್ತಾರ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.