ಮಾನ್ವಿ: ‘ಜಿಲ್ಲೆಯಲ್ಲಿ ಸುಮಾರು ₹2,600 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗಿರುವ ಜಲಧಾರೆ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು’ ಎಂದು ಜನಶಕ್ತಿ ಕೇಂದ್ರ ಸಂಘಟನೆಯ ಅಧ್ಯಕ್ಷ ಪ್ರಭುರಾಜ ಕೊಡ್ಲಿ ಒತ್ತಾಯಿಸಿದರು.
ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಜಿಲ್ಲೆಯಲ್ಲಿ ಜಲಧಾರೆ ಯೋಜನೆಯ ಕಾಮಗಾರಿ ಗುತ್ತಿಗೆದಾರರಾದ ಶಂಕರ ನಾರಾಯಣ ಕನ್ಸ್ ಟ್ರಕ್ಷನ್ಸ್ ಕಂಪನಿ ಮತ್ತು ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಹಲವು ಕಡೆ ಅವೈಜ್ಞಾನಿಕ ಮತ್ತು ಅಪೂರ್ಣ ಕಾಮಗಾರಿ ಕೈಗೊಂಡಿದ್ದಾರೆ. ಕಾಮಗಾರಿ ಪೂರ್ಣಗೊಳಿಸಲು ಅನಗತ್ಯವಾಗಿ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.
ರಾಯಚೂರು ಸಮೀಪದ ಸಾತ್ ಮೈಲ್ ಕ್ರಾಸ್ನಿಂದ ಸಿಂಧನೂರು ವರೆಗಿನ ರಾಜ್ಯ ಹೆದ್ದಾರಿಯನ್ನು ಮೇಲ್ದರ್ಜೆಗೇರಿಸುವ ಕಾಮಗಾರಿ ಕೈಗೊಳ್ಳಲು ನಿರ್ಧರಿಸಲಾಗಿದೆ. ಈ ಹೆದ್ದಾರಿಯ ಎರಡೂ ಬದಿಯಲ್ಲಿ ಬೆಳೆದಿರುವ ಸುಮಾರು 24,000 ಮರಗಳನ್ನು ಉಳಿಸಿ ಮತ್ತು ಬೆಳೆಸಲು ಅರಣ್ಯ ಇಲಾಖೆಯ ಅಧಿಕಾರಿಗಳು ಗಮನಹರಿಸಬೇಕು’ ಎಂದು ಮನವಿ ಮಾಡಿದರು.
ಸಂಘಟನೆಯ ಪದಾಧಿಕಾರಿಗಳಾದ ವಿಶ್ವನಾಥ ರಾಯಪ್ಪ ವಕೀಲ, ಎಸ್.ಎಂ.ಶಾನವಾಜ್, ಶೇಖ್ ಮೈನುದ್ದೀನ್, ಪ್ರದೀಪ ಕಪಗಲ್ ಮತ್ತು ಇಲಿಯಾಸ್ ಚೀಕಲಪರ್ವಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.