ರಾಯಚೂರು: ದೇವದುರ್ಗ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ನೀಡಬೇಕಾದ ಸೌಲಭ್ಯ ಸರಿಯಾಗಿ ನೀಡದೇ ಔಷಧಿಗಳನ್ನು ಖಾಸಗಿ ಆಸ್ಪತ್ರೆಗೆ ಮಾರಾಟ ಮಾಡುತ್ತಿದ್ದಾರೆ ಎಂದು ದೇವದುರ್ಗದ ನಾಗರಿಕ ಹಕ್ಕುಗಳ ಸಂರಕ್ಷಣಾ ಸಮಿತಿಯ ಸಂಚಾಲಕ ಮಲ್ಲಯ್ಯ ಕಟ್ಟಿಮನಿ ದೂರಿದರು.
ಆಸ್ಪತ್ರೆಯಲ್ಲಿನ ಅವ್ಯವಹಾರದ ಬಗ್ಗೆ ತಾಲ್ಲೂಕು ಹಾಗೂ ಜಿಲ್ಲಾ ಆರೋಗ್ಯ ಅಧಿಕಾರಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಆರೋಪಿಸಿದರು.
ದೇವದುರ್ಗದ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯರಿಗೆ ಹೆರಿಗೆ ಮಾಡಲು ವೈದ್ಯರು ₹4000 ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡುತ್ತಿಲ್ಲ, ಔಷಧಿಗಳಿದ್ದರೂ ಖಾಸಗಿ ಔಷಧಿ ಅಂಗಡಿಗೆ ಚೀಟಿ ಬರೆಯುತ್ತಿದ್ದಾರೆ ಎಂದು ಆರೋಪ ಮಾಡಿದರು.
ಆಸ್ಪತ್ರೆಯ ಅವ್ಯವಹಾರದ ಬಗ್ಗೆ ಅನೇಕ ಹೋರಾಟ ಮಾಡಿದರೂ ಪರಿಸ್ಥಿತಿ ಸುಧಾರಣೆಯಾಗಿಲ್ಲ. ಶಾಸಕಿ ಕರೆಮ್ಮ ನಾಯಕ ಅವರ ಗಮನಕ್ಕೆ ತಂದರೂ ಸ್ಪಂದಿಸಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮುಖಂಡರಾದ ಶಿವಪ್ಪ, ಹಂಪನಗೌಡ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.