ಮಸ್ಕಿ: ತಾಲ್ಲೂಕಿನ ಸಂತೆಕೆಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ.ಬಸಾಪೂರದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ₹ 1 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಕಾಂಕ್ರಿಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಮಂಗಳವಾರ ಶಾಸಕ ಆರ್.ಬಸನಗೌಡ ತುರ್ವಿಹಾಳ ಭೂಮಿಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಶಾಸಕ ಬಸನಗೌಡ, ₹ 1 ಕೋಟಿ ವೆಚ್ಚದಲ್ಲಿ ಗ್ರಾಮದ ರಸ್ತೆಗಳನ್ನು ಕಾಂಕ್ರಿಟ್ ರಸ್ತೆಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು. ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದೇನೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ಬರುವ ಅನುದಾನದಲ್ಲಿ ರಸ್ತೆ, ಶಾಲೆ ಕಟ್ಟಡಗಳ ನಿರ್ಮಾಣಕ್ಕೆ ಪ್ರಾಮುಖ್ಯತೆ ಕೊಡಲಾಗಿದೆ. ಕ್ಷೇತ್ರದ ಮತದಾರರು ಭರವಸೆ ಇಟ್ಟು ಎರಡು ಬಾರಿ ನನ್ನನ್ನು ಶಾಸಕರನ್ನಾಗಿ ಆಯ್ಕೆ ಮಾಡಿದ್ದಾರೆ. ಅವರಿಗಾಗಿ ನಾನು ಪ್ರಾಮಾಣಿಕವಾಗಿ ದುಡಿಯುವೆ ಎಂದು ತಿಳಿಸಿದರು.
ಗುತ್ತಿಗೆದಾರರಿಂದ ಗುಣಮಟ್ಟದ ಕಾಮಗಾರಿಯನ್ನು ಅಧಿಕಾರಿಗಳು ತೆಗೆದುಕೊಳ್ಳಬೇಕು ಎಂದು ಸೂಚಿಸಿದರು. ಇದೇ ಸಂದರ್ಭದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ದಿಢೀರ್ ಭೇಟಿ ನೀಡಿ ಮಕ್ಕಳ ವಿದ್ಯಾಭ್ಯಾಸ, ಯೋಗ ಕ್ಷೇಮ ವಿಚಾರಿಸಿದರು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಎಂದು ಶಿಕ್ಷಕರಿಗೆ ಸೂಚಿಸಿದರು. ಶಾಲೆಯ ಸಮಸ್ಯೆಗಳು ಇದ್ದರೆ ನನಗೆ ತಿಳಿಸಿ, ಬಿಸಿಯೂಟ ಸೇರಿದಂತೆ ಎಲ್ಲಾ ಕಡೆ ಮುಂಜಾಗೃತ ಕ್ರಮ ಕೈಗೊಳ್ಳಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಅಧಿಕಾರಿಗಳು, ಗ್ರಾಮದ ಮುಖಂಡರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.