ರಾಯಚೂರು: ಕರ್ತವ್ಯಲೋಪ ಎಸಗಿದ ಯಲಗಟ್ಟಾ ಪ್ರೌಢಶಾಲೆಯ ಮುಖ್ಯ ಶಿಕ್ಷಕನನ್ನು ವಜಾಗೊಳಿಸಲು ಒತ್ತಾಯಿಸಿ ನಡೆಯುತ್ತಿದ್ದ ಹೋರಾಟಕ್ಕೆ ವಿರೋಧಿಸಿ ಹಟ್ಟಿ ಸಿಪಿಐ ಹೊಸಕೇರಪ್ಪ ಶಾಮಿಯಾನ ಕಿತ್ತಿ ಹೋರಾಟಗಾರರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ನೇತೃತ್ವದಲ್ಲಿ ಮುಖಂಡರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದರು.
ಯಲಗಟ್ಟಾ ಪ್ರೌಢಶಾಲೆಯ ಮುಂದೆ ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಅನಿರ್ಧಿಷ್ಠಾವಧಿ ಧರಣಿ ನಡೆಸುತ್ತಿರುವ ವೇಳೆ ಹಟ್ಟಿ ಠಾಣೆ ಸಿಪಿಐ ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ ಡಾ.ಬಿ.ಆರ್ ಅಂಬೇಡ್ಕರ್, ಭಗತ್ ಸಿಂಗ್, ಚೆಗೆವಾರ ಭಾವಚಿತ್ರವಿರುವ ಬ್ಯಾನರ್ ಕಿತ್ತೆಸೆದು ಹೋರಾಟಗಾರರ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ಹೋರಾಟಗಾರರು ದೂರಿದರು.
ಮುಖ್ಯಶಿಕ್ಷಕ ನಾಗನಗೌಡ ಕಳೆದ 4 ವರ್ಷಗಳಿಂದ ರಜೆ ಪಡೆಯದೇ ಅನಧಿಕೃತವಾಗಿ ಗೈರಾಗುತ್ತಿದ್ದಾರೆ. ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ 7 ದಿನಗಳಿಂದ ಧರಣಿ ನಡೆಸಲಾಗುತ್ತಿದೆ. ಆದರೆ ಪೊಲೀಸರು ಹೋರಾಟ ಹತ್ತಿಕ್ಕಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಎಸ್ಎಫ್ ಐ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ವೀರಾಪೂರ, ತಾಲ್ಲೂಕು ಘಟಕದ ಕಾರ್ಯದರ್ಶಿ ಪವನ್ ಕುಮಾರ ಕಮದಾಳ, ಸಿಪಿಐಎಂ ಜಿಲ್ಲಾ ಘಟಕದ ಕಾರ್ಯದರ್ಶಿ ಕೆ.ಜಿ ವೀರೇಶ, ವೆಂಕಣ್ಣ, ಎಸ್ ಡಿಎಂಸಿ ಅಧ್ಯಕ್ಷ ನಿಂಗಪ್ಪ ಸಾಹುಕಾರ್, ದಲಿತ ಹಕ್ಕುಗಳ ಸಮಿತಿಯ ಮುಖಂಡ ಬಸವರಾಜ, ವಿವಿಧ ಸಂಘಟನೆಯ ಮುಖಂಡರಾದ ಅಣ್ಣಯ್ಯ, ಶಿವಶಂಕರ, ಮುರಡಯ್ಯಸ್ವಾಮಿ, ಗ್ರಾಮ ಪಂಚಾಯಿತಿ ಸದಸ್ಯ ಸಿದ್ದಣ್ಣ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.