ರಾಯಚೂರು: ‘ಹಿಂದೂ ಹಾಗೂ ಮುಸ್ಲಿಂ ಧರ್ಮದ ಪವಿತ್ರ ಹಬ್ಬಗಳಾದ ರಂಜಾನ್ ಹಾಗೂ ಚಂದ್ರಮಾನ ಯುಗಾದಿಯನ್ನು ಶಾಂತಿಯುತವಾಗಿ ಆಚರಿಸಬೇಕು’ ಎಂದು ಡಿವೈಎಸ್ಪಿ ಎಂ.ಜಿ ಸತ್ಯನಾರಾಯಣರಾವ್ ಹೇಳಿದರು.
ನಗರದ ಸದರ್ ಬಜಾರ್ ಪೊಲೀಸ್ ಠಾಣೆಯ ಆವರಣದಲ್ಲಿ ರಂಜಾನ್ ಮತ್ತು ಯುಗಾದಿ ಹಬ್ಬದ ಪ್ರಯುಕ್ತ ಆಯೋಜಿಸಿದ್ದ ಶಾಂತಿ ಪಾಲನಾ ಸಭೆಯಲ್ಲಿ ಮಾತನಾಡಿದರು.
ಸಾರ್ವಜನಿಕರಿಗೆ ಹಬ್ಬದ ದಿನ ಯಾವುದೇ ರೀತಿಯ ತೊಂದರೆಗಳಾಗದಂತೆ ನೋಡಿಕೊಳ್ಳಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
‘ಬೇಸಿಗೆ ತಾಪಮಾನ ಹೆಚ್ಚಾಗಿರುವ ಕಾರಣ ಇಲಾಖೆಯಿಂದ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುವುದು. ಒಟ್ಟಾರೆಯಾಗಿ ಎಲ್ಲರೂ ಒಂದು ಎಂಬ ಭಾವನೆಯಿಂದ ಹಬ್ಬವನ್ನು ಆಚರಣೆ ಮಾಡಬೇಕು‘ ಎಂದರು.
ವಕ್ಫ್ ಮಂಡಳಿ ಅಧ್ಯಕ್ಷ ಮಹ್ಮದ್ ಮೌಲಾನಾ ಫರೀದ್ ಖಾನ್, ಸದಾರ್ ಬಜಾರ್ ಪೊಲೀಸ್ ಠಾಣೆಯ ಅಧಿಕಾರಿ ಉಮೇಶ ಕಾಂಬ್ಳೆ, ಮಹಿಳಾ ಪೊಲೀಸ್ ಠಾಣೆ ಅಧಿಕಾರಿ ಸಂತೋಷ ಹಳ್ಳೂರು, ಜೆಸ್ಕಾಂ ಇಲಾಖೆಯ ಸಹಾಯಕ ಎಂಜಿನಿಯರ್ ಸೂಗುರಯ್ಯ ಸ್ವಾಮಿ, ಅಗ್ನಿಶಾಮಕ ದಳದ ಅಧಿಕಾರಿ ಖಾಸಿಂ ಸಾಬ್, ನೇತಾಜಿ ಪೊಲೀಸ್ ಠಾಣೆಯ ಪಿಎಸ್ಐ ಚಂದ್ರಪ್ಪ, ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯ ಪಿಎಸ್ಐ ಅಮಿತಾ ರಾಮ, ಪಶ್ಚಿಮ ಪೊಲೀಸ್ ಠಾಣೆಯ ಪಿಎಸ್ಐ ಶಾಂತಮೂರ್ತಿ, ಸಾಂಚಾರಿ ಪೊಲೀಸ್ ಠಾಣೆಯ ಅಧಿಕಾರಿ ವೆಂಕಟೇಶ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.