ಸಿಂಧನೂರು: 2023-24ನೇ ಸಾಲಿನ ಕರ್ನಾಟಕ ದರ್ಶನ ವಿದ್ಯಾರ್ಥಿಗಳ ಪ್ರವಾಸಕ್ಕೆ ಶಾಸಕ ಹಂಪನಗೌಡ ಬಾದರ್ಲಿ ಅವರು ನಗರದ ಪಿಡಬ್ಲ್ಯುಡಿ ಕ್ಯಾಂಪಿನ ಜೂನಿಯರ್ ಕಾಲೇಜು ಮೈದಾನದಲ್ಲಿ ಶನಿವಾರ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ‘ಇತಿಹಾಸ ಎಂದಿಗೂ ಯಾರು ಮರೆಯಬಾರದು. ಇತಿಹಾಸ ಪ್ರಸಿದ್ಧ ವಿವಿಧ ಪ್ರೇಕ್ಷಣೀಯ ಸ್ಥಳಗಳನ್ನು ಈಗಿನ ವಿದ್ಯಾರ್ಥಿಗಳಿಗೆ ದರ್ಶನ ಮಾಡಿಸುವ ಮೂಲಕ ಇತಿಹಾಸದ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ಶಿಕ್ಷಕರು ಮಾಡಬೇಕು. ವಿದ್ಯಾರ್ಥಿಗಳು ಪ್ರವಾಸಕ್ಕೆ ಹೋಗುವ ಸ್ಥಳಗಳ ಕುರಿತು ಸಮಗ್ರ ಮಾಹಿತಿ ಪಡೆದು ಇತರರಿಗೆ ತಿಳಿಸುವಂತಾಗಬೇಕು’ ಎಂದರು.
ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಬಸವಲಿಂಗಪ್ಪ ಮಾತನಾಡಿ, ‘ತಾಲ್ಲೂಕಿನ ವಿವಿಧ ಶಾಲೆಗಳ ಎಸ್ಸಿ, ಎಸ್ಟಿ, ಒಬಿಸಿ ಸೇರಿದಂತೆ ಒಟ್ಟು 146 ವಿದ್ಯಾರ್ಥಿಗಳು ಮೂರು ದಿನಗಳ ಕಾಲ ಹಂಪಿ, ಬಾದರ್ಲಿ, ಐಹೊಳೆ, ಪಟ್ಟದಕಲ್ಲು, ಕೂಡಲಸಂಗಮ, ವಿಜಯಪುರ ಮತ್ತಿತರ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ’ ಎಂದರು.
ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಮಲ್ಲಪ್ಪ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ ಹಿರೇಮಠ, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಖಾಜಿಮಲಿಕ್ ವಕೀಲ ಸೇರಿದಂತೆ ವಿವಿಧ ಪ್ರೌಢ ಶಾಲೆಗಳ ಮುಖ್ಯಶಿಕ್ಷಕರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.