ADVERTISEMENT

ಅನ್ಯ ಇಲಾಖೆಯ ಕಾರ್ಯದ ಹೊರೆ ತಪ್ಪಿಸಿ

ಕಂದಾಯ ಇಲಾಕೆ ನೌಕರರ ಸಂಘದಿಂದ ಹೆಚ್ಚುವರಿ ಜಿಲ್ಲಾಧಿಕಾರಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 2 ಜನವರಿ 2024, 14:47 IST
Last Updated 2 ಜನವರಿ 2024, 14:47 IST
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ, ಕರ್ನಾಟಕ ರಾಜ್ಯ ಸರಕಾರಿ ಕಂದಾಯ ಇಲಾಖೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಸೋಮವಾರ ರಾಮನಗರದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ ಅವರಿಗೆ ಮನವಿ ಸಲ್ಲಿಸಿದರು
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ, ಕರ್ನಾಟಕ ರಾಜ್ಯ ಸರಕಾರಿ ಕಂದಾಯ ಇಲಾಖೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಸೋಮವಾರ ರಾಮನಗರದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ ಅವರಿಗೆ ಮನವಿ ಸಲ್ಲಿಸಿದರು   

ರಾಮನಗರ: ಕಂದಾಯ ಇಲಾಖೆಯ ಸಿಬ್ಬಂದಿಗೆ ಅನ್ಯ ಇಲಾಖೆಗಳ ಕೆಲಸಗಳನ್ನು ವಹಿಸುತ್ತಿರುವುದನ್ನು ನಿಲ್ಲಿಸುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ, ಕರ್ನಾಟಕ ರಾಜ್ಯ ಸರಕಾರಿ ಕಂದಾಯ ಇಲಾಖೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

ಬೇರೆ ಇಲಾಖೆಗಳ ಹೆಚ್ಚುವರಿ ಕೆಲಸಗಳಿಂದಾಗಿ ಸಿಬ್ಬಂದಿ ಸಾರ್ವಜನಿಕ ರಜಾ ದಿನದಲ್ಲೂ ಕಾರ್ಯನಿರ್ವಹಿಸಬೇಕಾಗಿದೆ. ಗೂಗಲ್ ಮೀಟಿಂಗ್ ಹೆಸರಿನಲ್ಲಿ ಸಂಜೆ ಕರ್ತವ್ಯದ ಅವಧಿ ಮುಗಿದರೂ ಇರಬೇಕಾಗಿದೆ. ಬೇರೆ ಕೆಲಸಗಳಿಗಾಗಿ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಒತ್ತಡ ಹಾಕುತ್ತಿದ್ದಾರೆ. ಇದರಿಂದಾಗಿ, ಸಿಬ್ಬಂದಿ ಮಾನಸಿಕವಾಗಿ ನೆಮ್ಮದಿ ಕಳೆದುಕೊಂಡಿದ್ದಾರೆ ಎಂದು ಸಮಸ್ಯೆ ತೋಡಿಕೊಂಡರು.

ಒಂದೊಮ್ಮೆ ನಾವು ಬೇರೆ ಇಲಾಕೆಗಳ ಕೆಲಸ ನಿರ್ವಹಿಸಿದರೆ ಅದಕ್ಕೆ ಪ್ರತ್ಯೇಕ ಸಂಭಾವನೆ ನೀಡಬೇಕು. ರಾಜ್ಯದಲ್ಲಿ ಸುಮಾರು 4 ಸಾವಿರ ಗ್ರಾಮ ಆಡಳಿತಾಧಿಕಾರಿಗಳು, ಪ್ರಥಮ ದರ್ಜೆ ನೌಕರರು ಹಾಗೂ ದ್ವಿತೀಯ ದರ್ಜೆ ನೌಕರರು ಹುದ್ದೆ ಖಾಲಿ ಇವೆ. ಈ ಹುದ್ದೆಗಳನ್ನು ಭರ್ತಿ ಮಾಡಿ, ನೌಕರರ ಒತ್ತಡವನ್ನು ಕಡಿಮೆ ಮಾಡಬೇಕು ಎಂದು ಒತ್ತಾಯಿಸಿದರು.

ADVERTISEMENT

ನೌಕರರ ಕುಟುಂಬದವರಿಗೆ ಆರೋಗ್ಯದಲ್ಲಿ ಸಮಸ್ಯೆ ಕಂಡುಬಂದರೆ, ಅಂತವರ ಅಂತರ ಜಿಲ್ಲಾ ವರ್ಗಾವಣೆಯನ್ನು ಮರು ಜಾರಿಗೊಳಿಸಬೇಕು. ಸಿವಿಲ್ ವ್ಯಾಜ್ಯ ಪ್ರಕರಣಗಳಲ್ಲಿ ಪೊಲೀಸರು ಅಧಿಕಾರವನ್ನು ದುರುಪಯೋಗಪಡಿಸಿಕೊಂಡು, ಕಂದಾಯ ಇಲಾಖೆ ಅಧಿಕಾರಿಗಳ ಮೇಲೆ ಎಫ್‍ಐಆರ್ ದಾಖಲು ಮಾಡುತ್ತಿದ್ದಾರೆ. ಇದನ್ನು ತಡೆಯಬೇಕು ಎಂದು ಆಗ್ರಹಿಸಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಹರ್ಷ ಎಂ, ಗೌರವಾಧ್ಯಕ್ಷ ರಮೇಶ್, ಪ್ರಧಾನ ಕಾರ್ಯದರ್ಶಿ ರಾಜಶೇಖರ ಮೂರ್ತಿ, ಖಜಾಂಚಿ ಧರೇಗೌಡ, ಹಿರಿಯ ಉಪಾಧ್ಯಕ್ಷ ಜಗದೀಶ್, ಕಾರ್ಯಾಧ್ಯಕ್ಷ ಯತೀಶ್, ಮಾಜಿ ಅಧ್ಯಕ್ಷ ರಮೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.