ರಾಮನಗರ: ‘ವಿದ್ಯಾರ್ಥಿ ಜೀವನವು ಭವಿಷ್ಯದ ಬದುಕನ್ನು ರೂಪಿಸಿಕೊಳ್ಳುವ ಮಹತ್ವದ ಘಟ್ಟವಾಗಿದೆ. ಈ ಹಂತದಲ್ಲಿ ಮಾದಕವಸ್ತು ಸೇರಿದಂತೆ ಆರೋಗ್ಯ ಮತ್ತು ಭವಿಷ್ಯಕ್ಕೆ ಮಾರಕವಾಗುವಂತಹ ಯಾವುದೇ ಚಟಗಳ ಆಕರ್ಷಣೆಗೆ ಒಳಗಾಗದೆ ದೂರವಿರಬೇಕು’ ಎಂದು ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಮಹೇಶ್ ಬಿ.ಟಿ ಸಲಹೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ, ಅಬಕಾರಿ ಇಲಾಖೆ ಹಾಗೂ ಸ್ನಾತ್ತಕೋತ್ತರ ಕೇಂದ್ರ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಾದಕ ವಸ್ತುಗಳ ಬಳಕೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ತೀವ್ರ ಕುತೂಹಲ, ಸ್ನೇಹಿತರ ಒತ್ತಾಯ, ಗೆಳೆಯರ ಗುಂಪಿನಲ್ಲಿ ಹೊಂದಾಗಬೇಕೆಂಬ ಭಾವನೆ, ದೈಹಿಕ ಮತ್ತು ಮಾನಸಿಕ ಒತ್ತಡ ಕಡಿಮೆ ಮಾಡಿಕೊಳ್ಳಲು, ತಾತ್ಕಾಲಿಕವಾಗಿ ಸಮಸ್ಯೆಯನ್ನು ಮರೆಯಲು... ಹೀಗೆ ಅನೇಕ ಕಾರಣಗಳಿಗಾಗಿ ಮಾದಕ ವಸ್ತುಗಳ ಸೇವನೆಯನ್ನು ಯುವಜನರು ಪ್ರಾರಂಭಿಸುತ್ತಾರೆ. ಮುಂದೆ ಅದು ವ್ಯಸನವಾಗಿ ಅನೇಕ ರೀತಿಯ ಸಮಸ್ಯೆಗಳಿಗೆ ಕಾರಣವಾಗುತ್ತದೆ’ ಎಂದರು.
‘ವಿದ್ಯಾರ್ಥಿಗಳು ದುರ್ಜನರು ಹಾಗೂ ದುಶ್ಚಟಗಳ ಸಹವಾಸದಿಂದ ದೂರವಿರಬೇಕು. ಒಳ್ಳೆಯ ಅಭಿರುಚಿ ಹೊಂದಿರುವ ಸ್ನೇಹಿತರು ಹಾಗೂ ಗುರುಗಳ ಒಡನಾಟ ಇಟ್ಟುಕೊಂಡು ಉತ್ತಮ ಅಭ್ಯಾಸಗಳ ಕಡೆಗೆ ಗಮನ ಕೊಡಬೇಕು. ಮನಸ್ಸನ್ನು ಯಾವಾಗಲು ಶುದ್ಧವಾಗಿ ಇಟ್ಟುಕೊಳ್ಳಲು ಪ್ರಯತ್ನಿಸಬೇಕು. ಇದರಿಂದ ಶೈಕ್ಷಣಿಕವಾಗಿ ಸಾಧನೆ ಮಾಡಲು ಸಾಧ್ಯ’ ಎಂದು ಕಿವಿಮಾತು ಹೇಳಿದರು.
ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಡಾ. ಡೊಮಿನಿಕ್, ಅಬಕಾರಿ ನಿರೀಕ್ಷಕ ರಾಘವೇಂದ್ರ, ಜಿಲ್ಲಾ ಶಸ್ತ್ರಚಿಕಿತ್ಸಕಿ ಡಾ. ಪದ್ಮಾ, ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ. ಮಂಜುನಾಥ್, ಮನೋರೋಗ ತಜ್ಞ ಡಾ. ಆದರ್ಶ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಅರ್ಪಿತ, ಮನೋವೈದ್ಯಕೀಯ ಕಾರ್ಯಕರ್ತೆ ಪದ್ಮರೇಖಾ ಸೇರಿದಂತೆ ಆರೋಗ್ಯ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಇತರರು ಇದ್ದರು.
ಜಾಗೃತಿ ಜಾಥಾಕ್ಕೆ ಚಾಲನೆ
ಅಂತರರಾಷ್ಟ್ರೀಯ ಮಾದಕ ವಸ್ತುಗಳ ಬಳಕೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ನಗರದಲ್ಲಿ ಜಾಗೃತಿ ಜಾಥಾ ನಡೆಸಲಾಯಿತು. ಜಾಥಾಕ್ಕೆ ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಗ್ವಿಜಯ್ ಬೋಡ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಮಹೇಶ್ ಬಿ.ಟಿ ಚಾಲನೆ ನೀಡಿದರು. ಬೆಂಗಳೂರು–ಮೈಸೂರು ರಸ್ತೆಯಲ್ಲಿರುವ ಸ್ನಾತ್ತಕೋತ್ತರ ಕೇಂದ್ರದಿಂದ ಶುರುವಾದ ಜಾಥಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಯ ಆವರಣದವರೆಗೆ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.