ಕನಕಪುರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಭಾನುವಾರ ಬೆಳಿಗ್ಗೆ 10ರಿಂದ ರಾತ್ರಿ 8ರವರೆಗೆ ಕನಕಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬೃಹತ್ ಚುನಾವಣಾ ಪ್ರಚಾರ ನಡೆಸಿದರು.
ಬೆಳಿಗ್ಗೆ 10ಕ್ಕೆ ಕನಕಪುರಕ್ಕೆ ಆಗಮಿಸಿದ ಅವರು ಮೊದಲಿಗೆ ಟಿಎಂಸಿ ಕಾಲೊನಿಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಟಿಎಂಸಿ ಕಾಲೊನಿ ಪುರಸಭೆ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಮಲ್ಲಿಕಣ್ಣ ಬಿಜೆಪಿಗೆ ಸೇರ್ಪಡೆಗೊಂಡರು.
ಮೆಳೆಕೋಟೆಯಲ್ಲಿ ಮುಖಂಡ ಕೃಷ್ಣಪ್ಪ ಮನೆಗೆ ಭೇಟಿ ನೀಡಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಕೃಷ್ಣಪ್ಪ ಅವರ ಮನೆಯಲ್ಲಿ ಉಪಾಹಾರ ಸೇವಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಚೂಡಾಮಣಿ ಮನೆಗೆ ಭೇಟಿ ನೀಡಿದರು. ನಂತರ ಕಾಂಗ್ರೆಸ್ ಮುಖಂಡರಾದ ಸುವರ್ಣಮ್ಮ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಅಂಬೇಡ್ಕರ್ ನಗರದಲ್ಲಿ ನೂರಾರು ಮಹಿಳೆಯರು ಆತ್ಮೀಯವಾಗಿ ಬರಮಾಡಿಕೊಂಡರು. ತಾಲ್ಲೂಕಿನ ಸಾತನೂರು, ದೊಡ್ಡಾಲಹಳ್ಳಿ, ಕೋಡಿಹಳ್ಳಿ, ಹುಣಸನಹಳ್ಳಿ, ಕನಕಪುರ ನಗರದಲ್ಲಿ ಬಹಿರಂಗ ಚುನಾವಣಾ ಪ್ರಚಾರ ನಡೆಸಿದರು. ಸಾವಿರಾರು ಸಂಖ್ಯೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು, ಕಾರ್ಯಕರ್ತರು, ಪಕ್ಷದ ಅಭಿಮಾನಿಗಳು ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ವಿಧಾನ ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ ಮಾತನಾಡಿ, ಡಾ.ಮಂಜುನಾಥ್ ಅವರು ಜಯದೇವ ಆಸ್ಪತ್ರೆಯಲ್ಲಿ ನಿರ್ದೇಶಕರಾಗಿ ಉತ್ತಮ ಸೇವೆ ಸಲ್ಲಿಸಿ ಜನಸೇವಕರಾಗಿ, ಪ್ರಾಮಾಣಿಕರಾಗಿ ಒಳ್ಳೆಯ ಹೆಸರು ಗಳಿಸಿದ್ದಾರೆ. ಅವರ ಸೇವೆಯು ದೇಶದ ಜನರಿಗೆ ಸಿಗಬೇಕೆಂಬ ಉದ್ದೇಶದಿಂದ ಪ್ರಧಾನಿ ಮೋದಿ ಅವರು ಮಂಜುನಾಥ್ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ ಎಂದರು.
ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಜನರು ಮಂಜುನಾಥ್ ಅವರನ್ನು ಗೆಲ್ಲಿಸುವ ಮೂಲಕ ಪ್ರಧಾನಿ ಮೋದಿ ಅವರ ಕೈಬಲಪಡಿಸಬೇಕು. ಡಾಕ್ಟರ್ ಗೆದ್ದು ಕೇಂದ್ರದಲ್ಲಿ ಆರೋಗ್ಯ ಸಚಿವರಾಗಲಿದ್ದಾರೆ ಎಂದರು.
ಅ.ದೇವೇಗೌಡ, ಮಂಜುನಾಥ್ ಅವರ ಪತ್ನಿ ಅನಸೂಯ, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ನಾಗರಾಜು, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಪಿ.ಕುಮಾರ್, ಮುಖಂಡರಾದ ಸಿದ್ದಮರಿಗೌಡ, ಕಬ್ಬಾಳೇಗೌಡ, ಸಾತನೂರು ಚಂದ್ರು, ಗೇರಳ್ಳಿ ರಾಜೇಶ್, ನಲ್ಲಳ್ಳಿ ಶಿವಕುಮಾರ್, ಅನಿಲ್ಕುಮಾರ್, ಚಿನ್ನಸ್ವಾಮಿ, ಸ್ಟುಡಿಯೋ ಚಂದ್ರು, ಪುಟ್ಟರಾಜು, ಕುರುಬಳ್ಳಿ ರಾಜೇಶ್, ಹೂಕುಂದ ಪಂಚ, ಅಣ್ಣನಾಯಕ್, ಬೊಮ್ನಳ್ಳಿ ಕುಮಾರ್, ಸುನಿಲ್, ಶಿವಾನಂದ, ಯೋಗೇಶ್, ಬಿಜೆಪಿ ಜಿಲ್ಲಾಧ್ಯಕ್ಷ ಆನಂದಸ್ವಾಮಿ, ಜಿಲ್ಲಾ ಸಂಚಾಲಕ ಚೇತನ್, ಜಯಣ್ಣ ಸಾಥ್ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.