ADVERTISEMENT

ಚಾಮುಂಡೇಶ್ವರಿ ದೇವಸ್ಥಾನ: ಎನ್‌ಡಿಎ ಗೆಲುವಿಗಾಗಿ ಜೆಡಿಎಸ್‌ ಕಾರ್ಯಕರ್ತರಿಂದ ಪೂಜೆ

​ಪ್ರಜಾವಾಣಿ ವಾರ್ತೆ
Published 2 ಜೂನ್ 2024, 11:39 IST
Last Updated 2 ಜೂನ್ 2024, 11:39 IST
<div class="paragraphs"><p>ಜೆಡಿಎಸ್‌&nbsp;ಕಾರ್ಯಕರ್ತರಿಂದ ಪೂಜೆ</p></div>

ಜೆಡಿಎಸ್‌ ಕಾರ್ಯಕರ್ತರಿಂದ ಪೂಜೆ

   

ರಾಮನಗರ: ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಮತ್ತು ದೇಶದಲ್ಲಿ ಎನ್‌ಡಿಎ ಮೈತ್ರಿಕೂಟವು ಅತಿ ಹೆಚ್ಚು ಸ್ಥಾನಗಳನ್ನು ಗಳಿಸಿಬೇಕು. ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಬೇಕು ಎಂದು ಪ್ರಾರ್ಥಿಸಿ, ಜೆಡಿಎಸ್‌ನ ಕುಮಾರಣ್ಣ ಅಭಿಮಾನಿಗಳ ಬಳಗದ ಕಾರ್ಯಕರ್ತರು ನಗರದ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಭಾನುವಾರ ವಿಶೇಷ ಪೂಜೆ ಸಲ್ಲಿಸಿದರು.

ಬೆಳಿಗ್ಗೆ ದೇವಸ್ಥಾನದ ಆವರಣದಲ್ಲಿ ಜಮಾಯಿಸಿದ ಪಕ್ಷದ ಕಾರ್ಯಕರ್ತರು ಪ್ರಧಾನಿ ಮೋದಿ, ಜೆಡಿಎಸ್‌ ನಾಯಕ ಎಚ್‌.ಡಿ. ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ADVERTISEMENT

ನಂತರ, ದೇಗುಲದ ಒಳಾಂಗಣದಲ್ಲಿ ಉರುಳು ಸೇವೆ ಮಾಡಿ ಭಕ್ತಿ ಸಮರ್ಪಿಸಿದರು. ದೇವಾಲಯದ ಹೊರಗಡೆ ಮೋದಿ, ಕುಮಾರಸ್ವಾಮಿ ಹಾಗೂ ಮಂಜುನಾಥ್ ಅವರಿಗೆ ಜೈಕಾರ ಕೂಗಿದ ಕಾರ್ಯಕರ್ತರು, 101 ಈಡುಗಾಯಿ ಒಡೆದು ತಮ್ಮ ಕೋರಿಕೆ ನೆರವೇರಿಸುವಂತೆ ಪ್ರಾರ್ಥಿಸಿದರು.

ಈ ವೇಳೆ ಮಾತನಾಡಿದ ಪಕ್ಷದ ಪದವೀಧರರ ಘಟಕದ ರಾಜ್ಯ ಘಟಕದ ಅಧ್ಯಕ್ಷ ರಾಜಶೇಖರ್, ‘ಕರ್ನಾಟಕ ಮತ್ತು ಕೇಂದ್ರದಲ್ಲಿ ಎನ್‌ಡಿಎ ಮೈತ್ರಿಕೂಟವು ಅತಿ ಹೆಚ್ಚು ಸ್ಥಾನಗಳನ್ನು ಪಡೆಯುವುದರಲ್ಲಿ ಯಾವುದೇ ಅನುಮಾನವಿಲ್ಲ. ಬಹುತೇಕ ಮಾಧ್ಯಮಗಳ ಹಾಗೂ ಇತರ ಸಂಸ್ಥೆಗಳ ಮತಗಟ್ಟೆ ಸಮೀಕ್ಷೆ ಸಹ ಎನ್‌ಡಿಎ ಮೈತ್ರಿಕೂಟವೇ ಮತ್ತೆ ದೇಶದ ಗದ್ದುಗೆ ಹಿಡಿಯಲಿದೆ ಎಂದು ಭವಿಷ್ಯ ನುಡಿದಿವೆ’ ಎಂದರು.

‘ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದರೂ ಬಿಜೆಪಿ–ಜೆಡಿಎಸ್ ಮೈತ್ರಿಕೂಟವು ಹೆಚ್ಚು ಸ್ಥಾನಗಳನ್ನು ಗಳಿಸಲಿದೆ. ಕಾಂಗ್ರೆಸ್ ಪಕ್ಷವು ಒಂದಂಕಿಯನ್ನು ಸಹ ದಾಟುವುದಿಲ್ಲ. ಬೆಂಗಳೂರು ಗ್ರಾಮಾಂತರದಲ್ಲಿ ಡಾ. ಸಿ.ಎನ್. ಮಂಜುನಾಥ್ ಮತ್ತು ಮಂಡ್ಯದಲ್ಲಿ ಎಚ್‌.ಡಿ. ಕುಮಾರಸ್ವಾಮಿ ಅವರ ಗೆಲುವು ನಿಶ್ಚಿತವಾಗಿದ್ದು, ಇಬ್ಬರೂ ಪ್ರಧಾನಿ ಮೋದಿ ಅವರ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜೆಡಿಎಸ್ ಯುವ ಘಟಕದ ಪ್ರದಾನ ಕಾರ್ಯದರ್ಶಿ ಸಿ.ಎಸ್. ಜಯಕುಮಾರ್, ಜಿಲ್ಲಾ ಪದವೀಧರರ ಘಟಕದ ಅಧ್ಯಕ್ಷ ಜಿ.ಟಿ. ಕೃಷ್ಣ, ಹುಣಸನಹಳ್ಳಿ ವಿಎಸ್ಎಸ್ಎನ್ ಉಪಾಧ್ಯಕ್ಷ ಕೆ. ಕೆoಪರಾಜು, ಜೆಡಿಎಸ್ ಜಿಲ್ಲಾ ಸಾಮಾಜಿಕ ಜಾಲತಾಣ ಅಧ್ಯಕ್ಷ ಜಿ.ಕೆ. ಗoಗಾಧರ್, ಮುಖoಡರಾದ ಸಬ್ಬಕೆರೆ ಶಿವಲಿoಗಯ್ಯ, ಜನತಾ ನಾಗೇಶ್, ಎನ್. ರಮೇಶ್ ಗೌಡ, ವಿನೋದ್ ಭಗತ್, ಲೋಕೇಶ್, ಬೇಕರಿ ಶಿವು, ದೀಪಕ್, ಕೊತ್ತಿಪುರ ಪಿ. ಸುರೇಶ್ ಹಾಗೂ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.