ಚನ್ನಪಟ್ಟಣ: ಮುಂಬರುವ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಜೆಡಿಎಸ್ ಮೈತ್ರಿ ಪಕ್ಷದಿಂದ ಅಭ್ಯರ್ಥಿಯಾಗಿ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರನ್ನು ಕಣಕ್ಕಿಳಿಸಲು ಮೈತ್ರಿ ಪಕ್ಷದ ನಾಯಕರು ಮುಂದಾಗಬೇಕು ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎನ್. ಆನಂದಸ್ವಾಮಿ ಮನವಿ ಮಾಡಿದರು.
ನಗರದ ಕುವೆಂಪುನಗರದ ತಾಲ್ಲೂಕು ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿ.ಪಿ.ಯೋಗೇಶ್ವರ್ ಅವರು ಕಳೆದ ಬಾರಿ ಕಡಿಮೆ ಅಂತರದಿಂದ ಸೋಲು ಅನುಭವಿಸಿದ್ದಾರೆ. ಅವರಿಗೆ ಟಿಕೆಟ್ ನೀಡಿದರೆ ಮೈತ್ರಿ ಪಕ್ಷ ಸುಲಭವಾಗಿ ಗೆಲುವು ಸಾಧಿಸಬಹುದು ಎಂದರು.
ಯೋಗೇಶ್ವರ್ ಅವರು ತಾಲ್ಲೂಕಿನಲ್ಲಿ ಐದು ಬಾರಿ ಶಾಸಕರಾಗಿ ಹಲವಾರು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ನೀರಾವರಿ ಯೋಜನೆಗಳನ್ನು ತಂದು ತಾಲ್ಲೂಕಿನ ಕೆರೆಗಳನ್ನು ತುಂಬಿಸಿ ಅಂತರ್ಜಲ ಹೆಚ್ಚಾಗುವಂತೆ ಮಾಡಿದ್ದಾರೆ. ತಾಲ್ಲೂಕಿನಲ್ಲಿ ಮತ್ತೆ ಶಾಸಕರಾಗಲು ಅವರು ಅರ್ಹ ಅಭ್ಯರ್ಥಿಯಾಗಿದ್ದಾರೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಯೋಗೇಶ್ವರ್ ಅವರಿಗೆ ಟಿಕೆಟ್ ಕೊಡಿಸಲು ಮುಂದಾಗಬೇಕು ಎನ್ನುವುದು ನಮ್ಮ ಮನವಿಯಾಗಿದೆ ಎಂದರು.
ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಕೆ.ಟಿ. ಜಯರಾಂ, ತಾಲ್ಲೂಕು ಘಟಕದ ಅಧ್ಯಕ್ಷ ತೂಬಿನಕೆರೆ ರಾಜು, ನಗರ ಘಟಕದ ಅಧ್ಯಕ್ಷ ಶಿವಕುಮಾರ್, ನಗರಸಭಾ ಸದಸ್ಯ ಚಂದ್ರು, ಮುಖಂಡರಾದ ಶಿವಲಿಂಗೇಗೌಡ, ನಾಗವಾರ ಶಿವಕುಮಾರ್, ರಂಜಿತ್, ಭೂಹಳ್ಳಿ ಚಂದ್ರೇಗೌಡ, ಇತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.