ಕನಕಪುರ: ಕಸಬಾ ಹೋಬಳಿ ನಾರಾಯಣಪುರ ಗ್ರಾಮ ಪಂಚಾಯಿತಿಯಲ್ಲಿ ಮಂಗಳವಾರ ಸರ್ವ ಸದಸ್ಯರ ಸಾಮಾನ್ಯ ಸಭೆಯು ಪಂಚಾಯಿತಿ ಅಧ್ಯಕ್ಷ ಚಾಮುಂಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಪಂಚಾಯತಿಯಲ್ಲಿನ ವರ್ಗ-1 ಮತ್ತು 15ನೇ ಹಣಕಾಸು ಹಾಗೂ ಹುಲಿಬಲೆ ಗ್ರಾಮದಲ್ಲಿನ ಪ್ರಧಾನ ಮಂತ್ರಿ ಗ್ರಾಮ ವಿಕಾಸ ಯೋಜನೆಯಡಿಯಲ್ಲಿ ಉಳಿದಿರುವಂತಹ ₹ 14.24ಲಕ್ಷ ಮೊತ್ತಕ್ಕೆ ಅನುಮೋದನೆ ಪಡೆಯಲಾಯಿತು.
ಪಂಚಾಯಿತಿಯಲ್ಲಿ ಎಲೆಕ್ಟ್ರಿಷಿಯನ್ ಮತ್ತು ಆಪರೇಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ತಿಮ್ಮಯ್ಯ ಅವರ ನೇಮಕ ಮಾಡಿಕೊಳ್ಳಲು ಜಿಲ್ಲಾ ಪಂಚಾಯಿತಿಗೆ ಶಿಫಾರಸು ಮಾಡಲು ಪಂಚಾಯಿತಿ ಅನುಮೋದನೆ ನೀಡಿತು.
ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಅಂಗಡಿ ಮಳಿಗೆಗಳಿಗೆ ಜನರಲ್ ಲೈಸೆನ್ಸ್ ನೀಡಲು ಸಭೆ ಒಪ್ಪಿಗೆ ಸೂಚಿಸಿತು.
ಕೆಲವು ಗ್ರಾಮಗಳಲ್ಲಿ ಬಳಕೆ ಮಾಡುತ್ತಿರುವ ಕುಡಿಯುವ ನೀರು ಯೋಗ್ಯವಾಗಿಲ್ಲ ಎಂದು ಗುಣಮಟ್ಟ ಪರೀಕ್ಷಕರು ವರದಿ ನೀಡಿದ್ದಾರೆ ಎಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮಹಾಂತೇಶ್ ಸಭೆಗೆ ತಿಳಿಸಿದರು.
ಸದಸ್ಯರು ಚರ್ಚೆ ಮಾಡಿ ನೀರು ಕುಡಿಯಲು ಯೋಗ್ಯವಾಗಿಲ್ಲದ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಾಣ ಮಾಡಿ ಜನರಿಗೆ ಕುಡಿಯಲು ನೀರಿನ ವ್ಯವಸ್ಥೆ ಮಾಡಬೇಕೆಂದು ಸಲಹೆ ನೀಡಿದರು.
ಅಕ್ರಮವಾಗಿ ರೆಸಾರ್ಟ್ ನಡೆಸುತ್ತಿದ್ದು ರೆಸಾರ್ಟ್ ನಿರ್ಮಾಣಕ್ಕೆ ಪರವಾನಿಗೆಯನ್ನು ಪಡೆದಿಲ್ಲ, ಅವರು ಈಗ ಕಾನೂನು ಬದ್ಧವಾಗಿ ಲೈಸೆನ್ಸ್ ಪಡೆಯಲು ಮನವಿ ಮಾಡಿದ್ದಾರೆ ಎಂದು ಸಭೆಗೆ ತಿಳಿಸಿದರು.
ಜನರಲ್ ಲೈಸೆನ್ಸ್ ಮತ್ತು ರೆಸಾರ್ಟ್ ಕಟ್ಟಡದ ಅನುಮತಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಪಿಡಿಒ ಅವರು ಸದಸ್ಯರ ಗಮನಕ್ಕೆ ತಂದು ಚರ್ಚೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.