ADVERTISEMENT

ರೌಡಿಶೀಟರ್‌ಗಳನ್ನು ಸೇರಿಸಿಕೊಂಡಿದ್ದು ಬಿಜೆಪಿ ಮಾದರಿ- ರಾಮಲಿಂಗಾ ರೆಡ್ಡಿ 

​ಪ್ರಜಾವಾಣಿ ವಾರ್ತೆ
Published 4 ಜನವರಿ 2024, 10:59 IST
Last Updated 4 ಜನವರಿ 2024, 10:59 IST
<div class="paragraphs"><p>ರಾಮಲಿಂಗಾ ರೆಡ್ಡಿ&nbsp;</p></div>

ರಾಮಲಿಂಗಾ ರೆಡ್ಡಿ 

   

ಚನ್ನಪಟ್ಟಣ (ರಾಮನಗರ): ‘ಬಿಜೆಪಿ ಆಡಳಿತಾವಧಿಯಲ್ಲಿ ಸುಮಾರು 20 ಸಾವಿರ ಮಂದಿಯನ್ನು ರೌಡಿಶೀಟರ್‌ ಪಟ್ಟಿಯಿಂದ ತೆಗೆದು, ಕೇಸರಿ ಶಾಲು ಹಾಕಿ ಪಕ್ಷಕ್ಕೆ ಸೇರಿಸಿಕೊಂಡಿದ್ದರು. ಬಿಜೆಪಿಯವರು ಕೊಟ್ಟಿದ್ದ ಆಡಳಿತ ಮಾದರಿ ಇದು’ ಎಂದು ಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ವಾಗ್ದಾಳಿ ನಡೆಸಿದರು.

ಕರಸವೇಕರ ಬಂಧನ ಖಂಡಿಸಿ ಬಿಜೆಪಿ ರಾಜ್ಯದಾದ್ಯಂತ ಹೋರಾಟ ನಡೆಸುತ್ತಿರುವ ವಿಚಾರ ಕುರಿತು ಪಟ್ಟಣದಲ್ಲಿ ಗುರುವಾರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ‘ಬಿಜೆಪಿಯವರಿಗೆ ಮಾಡುವುದಕ್ಕೆ ಕೆಲಸವಿಲ್ಲ. ಬಂಧಿತ ಶ್ರೀಕಾಂತ ಪೂಜಾರಿ ಮೇಲೆ 16 ಪ್ರಕರಣಗಳಿದ್ದು, ಕೋರ್ಟ್ ಆದೇಶದ ಮೇರೆಗೆ ಆತನನ್ನು ಬಂಧಿಸಲಾಗಿದೆ. ಪೊಲೀಸರು ಕಾನೂನು ಪ್ರಕಾರವೇ ಕೆಲಸ ಮಾಡಿದ್ದಾರೆ’ ಎಂದರು.

ADVERTISEMENT

‘ವಿಧಾನ ಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್ ಅವರು ರಾಷ್ಟ್ರ ರಾಜಕಾರಣದಲ್ಲಿ ಕೆಲಸ ಮಾಡಿದವರು. ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ಏನಾದರೂ ಅನಾಹುತ ನಡೆಯಬಹುದು ಎಂಬ ಮಾಹಿತಿ ಇರಬಹುದು. ಈ ಕುರಿತು ಅವರನ್ನೇ ಕೇಳಬೇಕು’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

20 ಕಡೆ ಗೆಲುವು: ‘ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ತಯಾರಿ ನಡೆಸಿದ್ದು, 20 ಕ್ಷೇತ್ರಗಳಲ್ಲಿ ಗೆಲುವು ಖಚಿತ. ಇದರಲ್ಲಿ ಯಾವುದೇ ಸಂಶಯ ಬೇಡ. ಚುನಾವಣೆಗಾಗಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡರೂ ನಮಗೆ ಆತಂಕವಿಲ್ಲ. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನಾವು ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸಿದ್ದೇವೆ. ರಾಜ್ಯದಲ್ಲಿ ಕೆಟ್ಟ ಆಡಳಿತ ನಡೆಸಿದ್ದ ಬಿಜೆಪಿಯವರು, ಯಾವ ಮುಖ ಇಟ್ಟುಕೊಂಡು ಚುನಾವಣೆಯಲ್ಲಿ ಮತ ಕೇಳುತ್ತಾರೆ?’ ಎಂದು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.