ಮಾಗಡಿ (ಕುದೂರು): ಬೆಂಗಳೂರಿನ ಸುತ್ತಮುತ್ತ ಉತ್ತಮ ಮಳೆಯಾಗುತ್ತಿದ್ದು ತಿಪ್ಪಗೊಂಡನಹಳ್ಳಿ ಜಲಾಶಯಕ್ಕೆ ನೀರಿನ ಹರಿವು ಹೆಚ್ಚಾಗಿದೆ. ನೀರು ಬರುತ್ತಿರುವುದರಿಂದ ಜಲಾಶಯದಿಂದ ಪ್ರತಿದಿನ 10 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.
ಮಂಚನಬೆಲೆ ಜಲಾಶಯದ ಮೇಲ್ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು ಜಲಾಶಯಕ್ಕೆ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದೆ. ಇದರಿಂದ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಿತಿ ತಲುಪಿದೆ. ಜಲಾಶಯದ ಸುರಕ್ಷತೆ ದೃಷ್ಟಿಯಿಂದ ಜಲಾಶಯದಿಂದ ನೀರು ಬಿಡಲಾಗುತ್ತಿದೆ ಎಂದು ಮಂಚನಬೆಲೆ ಯೋಜನಾ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ತಿಳಿಸಿದ್ದಾರೆ.
ಜಲಾಶಯದ ಕೆಳಗಿನ ನದಿ ಪಾತ್ರದ ಅಕ್ಕಪಕ್ಕದ ಗ್ರಾಮಗಳ ಜನರು, ಜಾನುವಾರುಗಳನ್ನು ನದಿ ಪಾತ್ರದಲ್ಲಿ ಬಿಡುವುದಾಗಲಿ, ನದಿಯನ್ನು ದಾಟುವುದಾಗಲಿ ಮಾಡಬಾರದೆಂದು ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ.
ಕಳೆದ ಬಾರಿ ಮಂಚನಬೆಲೆ ಜಲಾಶಯದಿಂದ ಹೆಚ್ಚುವರಿ ನೀರು ಹರಿ ಬಿಟ್ಟ ಪರಿಣಾಮ ಜಲಾಶಯದ ಪಕ್ಕದ ಮುಖ್ಯ ಸೇತುವೆ ಕೊಚ್ಚಿ ಹೋಗಿದೆ. ಈಗ ತಾತ್ಕಾಲಿಕ ಸೇತುವೆಯಲ್ಲಿ ಸಾರ್ವಜನಿಕರು ಸಂಚಾರ ಮಾಡುತ್ತಿದ್ದಾರೆ. ಕಾವೇರಿ ನೀರಾವರಿ ನಿಗಮದಿಂದ ಹೊಸದಾಗಿ ಸೇತುವೆ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆ ಪೂರ್ಣವಾಗಿದೆ. ಶೀಘ್ರ ಹೊಸ ಸೇತುವೆ ಕಾಮಗಾರಿ ಆರಂಭಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.