ಕನಕಪುರ: ರಸ್ತೆಯಲ್ಲಿ ಪೈಪ್ಲೈನ್ ಅಳವಡಿಸಲು ಅಗೆದಿದ್ದ ಗುಂಡಿಯಲ್ಲಿ ಬಿದ್ದು ದ್ವಿಚಕ್ರವಾಹನ ಸವಾರ, ಬೆಂಗಳೂರಿನ ಕಗ್ಗಲಿಪುರ ವ್ಯಾಪ್ತಿಯ ವಾಸುದೇವಪುರ ಗ್ರಾಮದ ಪುಟ್ಟರಾಜು (37) ಎಂಬುವರು ಸಾವಿಗೀಡಾಗಿದ್ದಾರೆ.
ರಸ್ತೆಯಲ್ಲಿ ಹೋಗುತ್ತಿದ್ದವರು ನೋಡಿ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಂಬ್ಯುಲೆನ್ಸ್ನಲ್ಲಿ ದಯಾನಂದ ಸಾಗರ್ ಆಸ್ಪತ್ರೆಗೆ ದಾಖಲಿಸಿ ಕುಟುಂಬದವರಿಗೆ ಮಾಹಿತಿ ನೀಡಿದ್ದರು. ಪ್ರಾಥಮಿಕ ಚಿಕಿತ್ಸೆ ನೀಡಿದ ಆಸ್ಪತ್ರೆಯ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕಳಿಸಿದ್ದರು.
ಪೈಪ್ಲೈನ್ ಅಳವಡಿಸಲು ರಸ್ತೆ ಅಗೆದು ಸುರಕ್ಷತಾ ಕ್ರಮ ಕೈಗೊಳ್ಳದ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್ಎಸ್ಬಿ) ವಿರುದ್ಧ ಮೃತನ ಸಹೋದರ ಶನಿವಾರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಜಮೀನಿನ ಕೆಲಸಕ್ಕೆ ಫೆ. 8ರಂದು ಹಲಗೂರಿಗೆ ದ್ವಿಚಕ್ರವಾಹನದಲ್ಲಿ ಹೋಗಿ ರಾತ್ರಿ ವಾಪಸ್ ಬರುತ್ತಿದ್ದಾಗ ಶಿವನಹಳ್ಳಿ ಸಮೀಪದಲ್ಲಿ ರಸ್ತೆಯಲ್ಲಿ ಅಗೆದಿದ್ದ ಗುಂಡಿಗೆ ಪುಟ್ಟರಾಜು ಬೈಕ್ ಸಮೇತ ಬಿದ್ದಿದ್ದರು.
ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ರಾತ್ರಿ ಪುಟ್ಟರಾಜು ಮೃತಪಟ್ಟಿದ್ದಾರೆ. ತನ್ನ ಸಹೋದರನ ಸಾವಿಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾರಣವಾಗಿದ್ದು, ಸಂಬಂಧಪಟ್ಟವರ ವಿರುದ್ದ ಕ್ರಮ ಕೈಗೊಳ್ಳುವಂತೆ ಮೃತರ ಸಹೋದರ ಷಣ್ಮುಖ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ. ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.