ಮಾಗಡಿ: ತಾಲ್ಲೂಕಿನ ನೇತೇನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆಯುತ್ತಿರುವ ನರೇಗಾ ಯೋಜನೆಯಲ್ಲಿ ಅಕ್ರಮ ನಡೆದಿದೆ. ಕಾಮಗಾರಿ ಸ್ಥಳಕ್ಕೆ ಉನ್ನತ ಅಧಿಕಾರಿಗಳು ಭೇಟಿ ನೀಡಿ ಪಶೀಲನೆ ನಡೆಸಬೇಕೆಂದು ಗ್ರಾಮ ಪಂಚಾಯಿತಿ ಸದಸ್ಯ ಪುರುಷೋತ್ತಮ್ ಒತ್ತಾಯಿಸಿದರು.
ತಾಲ್ಲೂಕಿನ ವಿಶ್ವನಾಥಪುರ ಬಳಿ ನರೇಗಾ ಯೋಜನೆಯಡಿ ನಡೆಯುತ್ತಿರುವ ಗುಂಡು ತೋಪಿನ ಕಟ್ಟೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದರು. ₹4.85ಲಕ್ಷ ವೆಚ್ಚದಲ್ಲಿ ವಿಶ್ವನಾಥಪುರ ಗುಂಡು ತೋಪಿನ ಅಭಿವೃದ್ಧಿ ಕಾಮಗಾರಿಯಲ್ಲಿ ಯಂತ್ರ ಬಳಕೆ ಮಾಡಲಾಗಿದೆ. ಈ ಬಗ್ಗೆ ಗ್ರಾ.ಪಂ ಅಧ್ಯಕ್ಷೆ ಲಕ್ಷ್ಮಿದೇವಿ ಅವರನ್ನು ಪ್ರಶ್ನಿಸಿದರೆ, ಜಾಬ್ ಕಾರ್ಡ್ ಹೊಂದಿರುವ ಕೂಲಿ ಕಾರ್ಮಿಕರು ಕೆಲಸ ನಿರ್ವಹಿಸಿದ್ದಾರೆ ಎನ್ನುತ್ತಾರೆ. ಆದರೆ, ಕೂಲಿ ಕಾರ್ಮಿಕರು ಕೆಲಸ ನಿರ್ವಹಿಸಿರುವ ಬಗ್ಗೆ ಯಾವುದೇ ಸಾಕ್ಷ್ಯಾಧಾರ ಇಲ್ಲ ಎಂದು ಆರೋಪಿಸಿದರು.
ಈ ಬಗ್ಗೆ ಸಮಗ್ರ ತನಿಖೆ ನಡೆಸದಿದ್ದರೆ ಗ್ರಾ.ಪಂ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಪುರುಷೋತ್ತಮ್ ಎಚ್ಚರಿಸಿದರು.
ವಿಶ್ವನಾಥಪುರ ಗುಂಡು ತೋಪಿನ ಕಟ್ಟೆ ಹೂಳೆತ್ತುವ ಕಾಮಗಾರಿಯನ್ನು ಜಾಬ್ ಕಾರ್ಡ್ ಹೊಂದಿರುವ ಕೂಲಿ ಕಾರ್ಮಿಕರು ಮಾಡಿದ್ದಾರೆ. ಈ ಬಗ್ಗೆ ಎಂಜಿನಿಯಂರ್ ಆಳತೆ ಪುಸ್ತಕದಲ್ಲಿ ನಮೂದಿಸಿದ್ದು, ಅಧ್ಯಕ್ಷರು ಸಹಿ ಹಾಕಿರುವುದರಿಂದ ಬಿಲ್ ಪಾವತಿಸಬೇಕು ಎನ್ನುತ್ತಾರೆ ನೇತೇಹಳ್ಳಿ ಪಿಡಿಒ.ಎಸ್. ರಾಕೇಶ್.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.