ರಾಮನಗರ: ‘ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಅವರು, ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ನಾನೂ ಆಕಾಂಕ್ಷಿ ಎಂದು ಹೇಳಿಕೆ ನೀಡಿರುವುದರಲ್ಲಿ ತಪ್ಪೇನಿಲ್ಲ. ನಾವು ಎನ್ಡಿಎ ಮೈತ್ರಿಕೂಟದ ಭಾಗವಾಗಿರುವುದರಿಂದ, ಎಚ್.ಡಿ. ಕುಮಾರಸ್ವಾಮಿ ಅವರು ಏಕಾಏಕಿಯಾಗಿ ಯಾರನ್ನೂ ಅಭ್ಯರ್ಥಿ ಎಂದು ಘೋಷಿಸಲು ಸಾಧ್ಯವಿಲ್ಲ’ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ಚನ್ನಪಟ್ಟಣ ಉಪ ಚುನಾವಣೆ ಕುರಿತು ನಗರದಲ್ಲಿ ಮಂಗಳವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಕ್ಷೇತ್ರವನ್ನು ಜೆಡಿಎಸ್ ಪ್ರತಿನಿಧಿಸುತ್ತಿದ್ದರಿಂದ ಪಕ್ಷವೇ ಟಿಕೆಟ್ ಉಳಿಸಿಕೊಳ್ಳಬೇಕೆಂಬ ಅಭಿಪ್ರಾಯಗಳಿವೆ. ಕ್ಷೇತ್ರದ ಇತಿಹಾಸವನ್ನು ಗಮನಿಸಿದರೆ, ಇಲ್ಲಿ ಪಕ್ಷಕ್ಕೆ ಸಾಂಪ್ರದಾಯಿಕ ಮತಗಳಿವೆ’ ಎಂದರು.
‘ಹಿಂದೆ ವರದೇಗೌಡ ಅವರು ಸ್ಪರ್ಧಿಸಿ ಆಯ್ಕೆಯಾಗಿದ್ದರು. ನಾಗರಾಜು ಅವರು ಸ್ಪರ್ಧಿಸಿ 55 ಸಾವಿರ ಮತಗಳನ್ನು ಪಡೆದಿದ್ದರು. ಈ ಹಿನ್ನೆಲೆಯನ್ನು ಗಮನಿಸಿ, ನಮ್ಮ ಕಾರ್ಯಕರ್ತರು ಪಕ್ಷವೇ ಟಿಕೆಟ್ ಉಳಿಸಿಕೊಳ್ಳಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹಾಗಾಗಿ, ಅವರ ಭಾವನೆಯನ್ನು ಕ್ರೋಢೀಕರಿಸಬೇಕಿದೆ. ಅಂತಿಮವಾಗಿ ಮೈತ್ರಿ ನಾಯಕರು ಅಭ್ಯರ್ಥಿಯನ್ನು ಆಯ್ಕೆ ಮಾಡಲಿದ್ದಾರೆ. ಇಲ್ಲಿ ಗೊಂದಲಕ್ಕೆ ಅವಕಾಶವಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.