ಚನ್ನಪಟ್ಟಣ: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಶುಭಾ ಹೇಳಿದರು.
ನಗರದ ಎಲೆಕೇರಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಭಾನುವಾರ ಏರ್ಪಡಿಸಿದ್ದ ಮಾನವ ಹಕ್ಕುಗಳ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ತಾಲ್ಲೂಕು ಕಾನೂನುಗಳ ಸೇವಾ ಸಮಿತಿ, ತಾಲ್ಲೂಕು ವಕೀಲರ ಸಂಘ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಹಯೋಗದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.
ವಿದ್ಯಾರ್ಥಿ ದೆಸೆಯಿಂದಲೇ ಮಾನವ ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದರಿಂದ ಭವಿಷ್ಯದಲ್ಲಿ ಉತ್ತಮ ಸಮಾಜ ಸೃಷ್ಟಿಸಲು ಸಾಧ್ಯವಾಗುತ್ತದೆ. ಮಾನವ ಹಕ್ಕುಗಳು ವ್ಯಕ್ತಿಯ ಸ್ವಾತಂತ್ರ್ಯ, ಸಮಾನತೆ, ಗೌರವ ಹಾಗೂ ಘನತೆಗೆ ಸಂಬಂಧಿಸಿದೆ. ಪ್ರತಿಯೊಬ್ಬರಿಗೂ ಸ್ವತಂತ್ರವಾಗಿ ಜೀವಿಸಲು ಹಕ್ಕುಗಳು ರಕ್ಷಣೆ ನೀಡುತ್ತವೆ. ಮಹಿಳೆ, ಮಕ್ಕಳು ಹಾಗೂ ಸಾರ್ವಜನಿಕ ವಲಯದಲ್ಲಿ ಮಾನವ ಹಕ್ಕುಗಳ ಅರಿವು ಮತ್ತು ರಕ್ಷಣೆಗೆ ಸಹಕರಿಸಬೇಕು ಎಂದರು.
ಮಕ್ಕಳಿಗೆ ಕಾನೂನಿನ ಮೌಲ್ಯ, ಮೂಲಭೂತ ಕರ್ತವ್ಯ ಮತ್ತು ಸಂವಿಧಾನದತ್ತ ಹಕ್ಕುಗಳ ಕುರಿತು ಮಾಹಿತಿ ನೀಡಬೇಕು ಎಂದು ವಕೀಲರ ಸಂಘದ ಉಪಾಧ್ಯಕ್ಷ ಎಸ್.ಬಿ. ಧನಂಜಯ, ಸರ್ಕಾರಿ ಸಹಾಯಕ ಅಭಿಯೋಜಕ ವೀರಭದ್ರಯ್ಯ ಅಭಿಪ್ರಾಯಪಟ್ಟರು.
ಹಿರಿಯ ವಕೀಲ ಕೃಷ್ಣಪ್ಪ, ವಕೀಲರ ಸಂಘದ ಖಜಾಂಚಿ ಹೇಮಂತ್, ಸಹಾಯಕ ಆರಕ್ಷಕ ಉಪನಿರೀಕ್ಷಕ ಕಾವೇರಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ದೈಹಿಕ ಶಿಕ್ಷಣ ಪರಿವೀಕ್ಷಕ ಶಿವಣ್ಣ, ಪ್ರಾಂಶುಪಾಲ ಸತೀಶ್, ಶಿಕ್ಷಣ ಸಂಯೋಜಕ ಯೋಗೇಶ್ ಚಕ್ಕೆರೆ, ಹಿರಿಯ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್, ನಿಲಯ ಪಾಲಕ ಅರುಣ್ ಕುಮಾರ್, ವಕೀಲರಾದ ರಕ್ಷಿತಾ, ಪಾರ್ವತಿ, ಹೇಮಂತ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.