ಶಿವಮೊಗ್ಗ: ತಾಲ್ಲೂಕಿನ ಗೆಜ್ಜೇನಹಳ್ಳಿಯ ಮದುವೆಯೊಂದರಲ್ಲಿ ಊಟ ಮಾಡಿದ್ದ 120 ಜನರಿಗೆ ವಾಂತಿ, ಭೇದಿ ಕಾಣಿಸಿಕೊಂಡಿದ್ದು 51 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೆಜ್ಜೇನಹಳ್ಳಿಯ ಸಮುದಾಯ ಭವನದಲ್ಲಿ ಶುಕ್ರವಾರ ರಾತ್ರಿ ನಡೆದ ಮದುವೆ ಆರತಕ್ಷತೆಯಲ್ಲಿ ಸಾವಿರಕ್ಕೂ ಹೆಚ್ಚು ಜನರು ಸೇರಿದ್ದರು. ಮೂರನೇ ಪಂಕ್ತಿಯಲ್ಲಿ ಊಟ ಮಾಡಿದವರಿಗೆ ವಾಂತಿ, ಭೇದಿ ಕಾಣಿಸಿಕೊಂಡಿದೆ. ಮೊದಲೆರಡು ಪಂಕ್ತಿಯಲ್ಲಿ ಊಟ ಮಾಡಿದವರು ಆರೋಗ್ಯವಾಗಿದ್ದಾರೆ.
ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ತಕ್ಷಣವೇ ಆರೋಗ್ಯ ಸಿಬ್ಬಂದಿ ಸಮೀಪದ ಅಂಗನವಾಡಿಯಲ್ಲೇ ಪ್ರಾಥಮಿಕ
ಚಿಕಿತ್ಸೆ ನೀಡಿದ್ದಾರೆ. ನಂತರ 51 ಜನರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
‘ವಾಂತಿ, ಭೇದಿ ಕಾಣಿಸಿಕೊಂಡ ಎಲ್ಲರ ಆರೋಗ್ಯದಲ್ಲೂ ಚೇತರಿಕೆ ಕಂಡಿದೆ. ಕುಡಿಯುವ ನೀರು, ಆಹಾರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ನಂತರ ಕಾರಣ ತಿಳಿಯಲಿದೆ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.