ಸೊರಬ: ಜಾಗತಿಕವಾಗಿ ಜನಸಂಖ್ಯೆ ಏರಿಕೆಯಾಗುತ್ತಿದ್ದು, ಇದರಿಂದಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಬೇಕಿರುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಪ್ರಭಾರ ಇಒ ಡಾ.ಎನ್.ಆರ್ ಪ್ರದೀಪಕುಮಾರ್ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ರಾಜ್ಯ ಹಾಗೂ ದೇಶದಲ್ಲಿ ವೇಗವಾಗಿ ಜನಸಂಖ್ಯೆ ಏರಿಕೆಯಾಗುತ್ತಿದೆ. ರಾಜ್ಯದ ಜನಸಂಖ್ಯೆ ಈಗಾಗಲೇ 7 ಕೋಟಿ ಸನಿಹದಲ್ಲಿದೆ. ಗಂಟೆಗೆ 3,321 ಮಕ್ಕಳ ಜನನ ವಾಗುತ್ತಿದೆ. ಅನಕ್ಷರತೆ ಮತ್ತು ಮೂಢನಂಬಿಕೆಗಳು ಜನಸಂಖ್ಯೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿವೆ. ಜನಸಂಖ್ಯಾ ಹೆಚ್ಚಳದಿಂದ ಬಡತನ, ನಿರುದ್ಯೋಗದಂತಹ ಸಮಸ್ಯೆಗಳು ಎದುರಾಗುತ್ತಿವೆ. ಜನಸಂಖ್ಯಾ ನಿಯಂತ್ರಣ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ ಅಗತ್ಯ ಎಂದು ತಿಳಿಸಿದರು.
ಅರ್ಥಶಾಸ್ತ್ರ ಸಹಾಯಕ ಪ್ರಾಧ್ಯಾಪಕಿ ನೇತ್ರಾವತಿ, ಡಾ. ನಿರಂಜನ್ ಮಾತನಾಡಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್.ಹೇಮಲತಾ, ಆರೋಗ್ಯ ಸಿಬ್ಬಂದಿ ನೇತ್ರಾವತಿ, ಪದ್ಮಾವತಿ, ಗಾಯತ್ರಿ, ಶಿಲ್ಪಾ, ಲೀಲಾವತಿ, ಸುಧೀರ್, ಶಶಿಕುಮಾರ್, ಆರ್. ತೇಜು, ಸಂದೇಶ್ ಜಗದೀಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.