ಶಿಕಾರಿಪುರ: ತಾಲ್ಲೂಕಿನ ಎಲ್ಲಾ ಕೆರೆಗಳನ್ನು ತುಂಬಿಸಲು ಆದ್ಯತೆ ನೀಡಬೇಕು ಎಂದು ಶಾಸಕ ಬಿ.ವೈ. ವಿಜಯೇಂದ್ರ ಸೂಚಿಸಿದರು.
ತಾಲ್ಲೂಕಿನ ಕೆರೆಗಳನ್ನು ತುಂಬಿಸುವ ಪುರದಕೆರೆ ಏತ ನೀರಾವರಿ ಯೋಜನೆ ನಿರ್ಮಿಸಿದ ಸ್ಥಳಕ್ಕೆ ಈಚೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಮಾತನಾಡಿದರು.
ತಾಲ್ಲೂಕಿನ ಹೊಸೂರು, ತಾಳಗುಂದ, ಉಡುಗುಣಿ ಹೋಬಳಿಯ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪುರದಕೆರೆ ಏತ ನೀರಾವರಿ ಯೋಜನೆ ರೂಪಿಸಲಾಗಿದೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಹಿರೇಕೆರೂರು, ರಟ್ಟೀಹಳ್ಳಿ ರೈತರ ಸಹಕಾರದಿಂದ ಏತ ನೀರಾವರಿ ಯೋಜನೆ ನಿರ್ಮಿಸಲಾಗಿದೆ. ಮುಂದಿನ ದಿನಗಳಲ್ಲಿ ಸುರಿಯುವ ಮಳೆಯಿಂದ ತುಂಗ ಭದ್ರಾ ನದಿ ಭರ್ತಿಯಾಗಿ ಪುರದಕೆರೆಗೆ ನೀರು ಬಂದ ಕೂಡಲೇ ನೀರನ್ನು ಶಿಕಾರಿಪುರ ತಾಲ್ಲೂಕಿನ ಕೆರೆಗಳನ್ನು ತುಂಬಿಸಲು ನೀರು ಬಿಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ಮುಖಂಡರಾದ ತಾಳಗುಂದ ಸತೀಶ್, ಶಂಭು, ಶಿವರಾಜ್, ಹೊಸೂರು ರುದ್ರೇಶ್, ಜೀನಳ್ಳಿ ಪ್ರಶಾಂತ್, ಎಸ್.ಎಸ್. ರಾಘವೇಂದ್ರ, ಸುರೇಶ್ ನಿಂಬೆಗೊಂದಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.