ಶಿವಮೊಗ್ಗ: ಚಿತ್ರದುರ್ಗದ ರೇಣುಕಸ್ವಾಮಿಯನ್ನು ಕೊಲೆ ಮಾಡಿದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘ ಹಾಗೂ ಜಿಲ್ಲೆಯ ವಿವಿಧ ಸಂಘಟನೆಗಳಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಲಾಯಿತು.
‘ಸಿನಿಮಾ ನಟರಾದವರು ಸಮಾಜಕ್ಕೆ ಮಾರ್ಗದರ್ಶಿಯಾಗಿ ಇರಬೇಕು. ಆದರೆ ದರ್ಶನ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. ಅವರಿಗೆ ಚಿತ್ರರಂಗದಿಂದ ನಿಷೇಧ ಹೇರಬೇಕು. ಯಾವುದೇ ಪ್ರಭಾವಿಗಳ ಒತ್ತಡಕ್ಕೆ ಮಣಿಯದೇ ಸರ್ಕಾರ ಪ್ರಾಮಾಣಿಕವಾಗಿ ತನಿಖೆ ನಡೆಸಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.
‘ನಟ ದರ್ಶನ್ ಮತ್ತು ಇತರ ಆರೋಪಿಗಳು ರೇಣುಕಸ್ವಾಮಿ ಮೇಲೆ ಹಲ್ಲೆ ಮಾಡಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿದ್ದಾರೆ. ಇದು ಇಡೀ ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ವಿಚಾರ. ರಾಜ್ಯ ಸರ್ಕಾರ ರೇಣುಕಸ್ವಾಮಿ ಕುಟುಂಬಕ್ಕೆ ಪರಿಹಾರ ಘೋಷಿಸಬೇಕು. ಇದನ್ನು ಗಂಭೀರವಾಗಿ ಪರಿಗಣಿಸುವುದು ಅಗತ್ಯವಿದೆ. ವಿಳಂಬ ಧೋರಣೆ ಅನುಸರಿಸಬಾರದು’ ಎಂದು ಒತ್ತಾಯಿಸಿದರು.
‘ಸರ್ಕಾರ ಯಾವುದೇ ಪ್ರಭಾವಿಗಳ ಒತ್ತಡಕ್ಕೆ ಮಣಿಯಬಾರದು. ತನಿಖೆ ಹಾದಿ ನೋಡಿದರೇ ಪಾರದರ್ಶಕವಾದ ತನಿಖೆ ನಡೆಯುತ್ತಿದೆ ಎನಿಸುತ್ತಿದೆ. ರೇಣುಕಸ್ವಾಮಿಗೆ ಕರೆಂಟ್ ಶಾಕ್ ನೀಡಿ ಕೊಲೆ ಮಾಡಿರುವುದು ಅಮಾನುಷ’ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
‘ತೂಗುದೀಪ್ ಶ್ರೀನಿವಾಸ್ ಅವರು ಸಿನಿಮಾದಲ್ಲಿ ಖಳನಾಯಕರಾಗಿ ನಟಿಸಿದರೂ ನಿಜ ಜೀವನದಲ್ಲಿ ಮಾದರಿ ಆಗಿದ್ದರು. ಆದರೆ ಅವರ ಪುತ್ರ ದರ್ಶನ್ ಚಲನಚಿತ್ರಗಳಲ್ಲಿ ನಾಯಕ ಆಗಿ ನಿಜ ಜೀವನದಲ್ಲಿ ಖಳನಾಯಕ ಆಗಿದ್ದಾರೆ. ಕೊಲೆ ಮಾಡಿರುವ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು’ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ್ ಆಗ್ರಹಿಸಿದರು.
ರಾಚೋಟೇಶ್ವರ ಸ್ವಾಮೀಜಿ, ರುದ್ರೇಗೌಡ, ಎಸ್.ಪಿ. ದಿನೇಶ್, ಎಚ್.ಎಂ. ಚಂದ್ರಶೇಖರಪ್ಪ, ಎಚ್.ಸಿ. ಯೋಗೀಶ್, ಎಸ್.ಎಸ್. ಜ್ಯೋತಿಪ್ರಕಾಶ್ , ಜಗದೀಶ್, ಮರುಳೇಶ್, ಚಂದ್ರಪ್ಪ, ಬಳ್ಳೇಕೆರೆ ಸಂತೋಷ, ರೇಣುಕಾರಾಧ್ಯ, ರೇಣುಕಾ ನಾಗರಾಜ, ಅನಿತಾ ರವಿಶಂಕರ್, ಚನ್ನಬಸಪ್ಪ, ಸೋಮನಾಥ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.