ಬಸವಾಪಟ್ಟಣ: ಸಮೀಪದ ಯಲೋದಹಳ್ಳಿಯಲ್ಲಿ ತೋಟಕ್ಕೆ ನಸುಕಿನಲ್ಲಿ ನೀರು ಹಾಯಿಸಲು ಹೋಗಿದ್ದ ರೈತ ಹನುಮಂತಪ್ಪ (63) ಅವರ ಮೇಲೆ ಕಾಡು ಹಂದಿ ದಾಳಿ ಮಾಡಿದ್ದು, ಅವರು ಮಾರಣಾಂತಿಕವಾಗಿ ಗಾಯಗೊಂಡಿದ್ದಾರೆ.
ಕಾಡುಹಂದಿಯು ಅವರ ಹೊಟ್ಟೆಗೆ ಕೋರೆಯಿಂದ ತಿವಿದಿದ್ದರಿಂದ, ತೀವ್ರ ರಕ್ತಸ್ರಾವವಾಗಿದೆ. ಕೂಡಲೇ ಅವರನ್ನು ದಾವಣಗೆರೆ ಎಸ್.ಎಸ್.ಹೈಟೆಕ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ವೈದ್ಯರು ಶಸ್ತ್ರ ಚಿಕಿತ್ಸೆ ನಡೆಸಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆಸಿದ್ದಾರೆ.
ಈ ಬಗ್ಗೆ ಬಸವಾಪಟ್ಟಣ ಪೊಲೀಸ್ ಠಾಣೆ ಮತ್ತು ಅರಣ್ಯ ಇಲಾಖೆಗೆ ದೂರು ನೀಡಿದ್ದು, ಸರ್ಕಾರದಿಂದ ಪರಿಹಾರ ನೀಡುವುದಾಗಿ ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ ಎಂದು ಹನುಂತಪ್ಪ ಅವರ ಪುತ್ರ ಜಗದೀಶ್ ತಿಳಿಸಿದ್ದಾರೆ.
ಯಲೋದಹಳ್ಳಿ ಗ್ರಾಮದ ರೈತರ ಬಹುತೇಕ ಹೊಲ ಮತ್ತು ತೋಟಗಳು ಗುಡ್ಡದ ಬದಿಯಲ್ಲಿದ್ದು, ಕರಡಿ, ಚಿರತೆ ಮತ್ತು ಹಂದಿಗಳು ನಿರಂತರವಾಗಿ ರೈತರ ಮೇಲೆ ದಾಳಿ ಮಾಡಿ ಗಾಯಗೊಳಿಸುತ್ತಿವೆ. ಅರಣ್ಯ ಇಲಾಖೆ ರೈತರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಹಸಿರು ಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಆರ್.ರವಿಕುಮಾರ್ ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.