ತೀರ್ಥಹಳ್ಳಿ: ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ 37 ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದೆ. ಆಗ ಬಿಜೆಪಿಯ ಯಾವ ಮುಖಂಡರೂ ಚಕಾರ ಎತ್ತಲಿಲ್ಲ. ಶಾಸಕ ಆರಗ ಜ್ಞಾನೇಂದ್ರ ನಡೆಸಿದ ಪ್ರತಿಭಟನೆಯಲ್ಲಿ ಸತ್ಯಾಂಶ ಇಲ್ಲ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಆದರ್ಶ ಹುಂಚದಕಟ್ಟೆ ಕುಟುಕಿದರು.
‘ದಕ್ಷಿಣ ರಾಜ್ಯಗಳ ಪೈಕಿ ಕರ್ನಾಟಕದಲ್ಲಿಯೇ ಕಡಿಮೆ ಬೆಲೆಗೆ ತೈಲ ಮಾರಾಟವಾಗುತ್ತಿದೆ. ಪ್ರತಿಭಟಿಸುವ ಆಸೆ ಇದ್ದರೆ ಗೋವಾಕ್ಕೆ ತೆರಳಲಿ. ಟಿಕೆಟ್ ಬುಕ್ ಮಾಡಿ ಕೊಡುತ್ತೇನೆ’ ಎಂದು ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಹರಿಹಾಯ್ದರು.
ಮಠದ ಜಮೀನನ್ನು ಅಕ್ರಮವಾಗಿ ಶಾಸಕರ ಮಗನ ಹೆಸರಿಗೆ ವರ್ಗಾಯಿಸಲಾಗಿದೆ. ಗುತ್ತಿಗೆದಾರರೊಬ್ಬರು ಇದರಲ್ಲಿ ನೇರವಾಗಿ ಭಾಗಿಯಾಗಿದ್ದು, ಭೂ ಹಗರಣದ ವಿಷಯವನ್ನು ಜನರ ಮನೆ ಬಾಗಿಲಿಗೆ ತಲುಪಿಸಲು ಯುವ ಕಾಂಗ್ರೆಸ್ ಸಜ್ಜಾಗಿದೆ ಎಂದು ಹೇಳಿದರು.
ಬಿಜೆಪಿಗೆ ಮುಂಬರುವ ತಾಲ್ಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ ಭಯ ಕಾಡುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ಬಿಟ್ಟಿ ಭಾಗ್ಯ ಎಂದಿರುವ ಶಾಸಕ ಆರಗ ಜ್ಞಾನೇಂದ್ರ ಬಡವರ ವಿರೋಧಿ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಯುವ ಕಾಂಗ್ರೆಸ್ ತಾಲ್ಲೂಕು ಘಟಕದ ಅಧ್ಯಕ್ಷ ಅಮರನಾಥ ಶೆಟ್ಟಿ ತಿಳಿಸಿದರು.
ಯುವ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಅಮರನಾಥ ಶೆಟ್ಟಿ, ಗ್ರಾಮಾಂತರ ಅಧ್ಯಕ್ಷ ಪುಟೋಡ್ಲು ರಾಘವೇಂದ್ರ, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ವಲ್ ಗೌಡ, ಮುಖಂಡ ಶ್ರೇಯಸ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.