ಶಿವಮೊಗ್ಗ: ‘ಬಿಜೆಪಿಗೆ ಮರಳುವಂತೆ ಪಕ್ಷದ ನಾಯಕರಿಂದ ಕರೆ ಬಂದಿದೆ. ಆದರೆ, ಪಕ್ಷ ಸೇರುವ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಮುಂದಿನ ದಿನಗಳಲ್ಲಿ ನನ್ನ ನಿಲುವು ತಿಳಿಸುತ್ತೇನೆ’ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ‘ವ್ಯಕ್ತಿಗಿಂತ ಪಕ್ಷ ಮುಖ್ಯ. ಅಂತೆಯೇ ನಾನು ಬಿಜೆಪಿ ಮರಳಿ ಸೇರುವ ಕುರಿತು ಮಾತುಕತೆ ಆಗಬೇಕಿದೆ. ನನ್ನ ಅಭಿಪ್ರಾಯವನ್ನು ಪಕ್ಷದ ನಾಯಕರಿಗೆ ಇನ್ನೂ ತಿಳಿಸಿಲ್ಲ’ ಎಂದರು.
ಲೋಕಸಭೆ ಚುನಾವಣೆಯಲ್ಲಿ ಪುತ್ರ ಕೆ.ಈ. ಕಾಂತೇಶ ಅವರಿಗೆ ಹಾವೇರಿ ಕ್ಷೇತ್ರದಿಂದ ಸ್ಪರ್ಧಿಸಲು ಪಕ್ಷದ ಟಿಕೆಟ್ ದೊರೆಯದ್ದಕ್ಕೆ ಮುನಿಸಿಕೊಂಡಿದ್ದ ಈಶ್ವರಪ್ಪ, ಅದಕ್ಕೆ ಬಿ.ಎಸ್. ಯಡಿಯೂರಪ್ಪ ಅವರ ಕುಟುಂಬವೇ ಕಾರಣ ಎಂದು ದೂರಿದ್ದರಲ್ಲದೆ, ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರವಾಗಿ ಸ್ಪರ್ಧಿಸಿ ಸೋತಿದ್ದರು. ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರಿಂದ ಈಶ್ವರಪ್ಪ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.