ಶಿವಮೊಗ್ಗ: ಮಾದಕ ವಸ್ತು ಗಾಂಜಾ ವಿರುದ್ಧ ಜೂನ್ 1ರಿಂದ 21ರವರೆಗೆ ವಿಶೇಷ ಕಾರ್ಯಾಚರಣೆ ನಡೆಸಿ 61 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ತಿಳಿಸಿದರು.
ಕಾರ್ಯಾಚರಣೆ ವೇಳೆ ಒಟ್ಟು 15 ಕೆ.ಜಿ. 363 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದು, ಇದರ ಒಟ್ಟು ಮೌಲ್ಯ ಅಂದಾಜು ₹ 5.56 ಲಕ್ಷ ಎಂದು ಇಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ–1 ಅನಿಲ್ ಕುಮಾರ್ ಭೂಮರೆಡ್ಡಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ–2 ಕಾರಿಯಪ್ಪ ಎ.ಜಿ. ಅವರ ಮಾರ್ಗದರ್ಶನ ಹಾಗೂ ಆಯಾ ಉಪ ವಿಭಾಗಗಳ ಪೊಲೀಸ್ ಅಧೀಕ್ಷಕರ ಮೇಲ್ವಿಚಾರಣೆಯಲ್ಲಿ ಪೊಲೀಸ್ ನಿರೀಕ್ಷರು ಮತ್ತು ಉಪ ನಿರೀಕ್ಷಕರು ಹಾಗೂ ಸಿಬ್ಬಂದಿ ಒಳಗೊಂಡ ತಂಡವು ವಿಶೇಷ ಕಾರ್ಯಾಚರಣೆ ನಡೆಸಿದೆ ಎಂದು ಅವರು ವಿವರಿಸಿದರು.
ಮಾದಕ ದ್ರವ್ಯ ಗಾಂಜಾ ಮಾರಾಟ, ಸೇವನೆ ಮತ್ತು ಗಾಂಜಾ ಬೆಳೆಯುವ ಕುರಿತು ಮಾಹಿತಿ ಇದ್ದಲ್ಲಿ ಸಾವರ್ಜನಿಕರು ಸಮೀಪದ ಪೊಲೀಸ್ ಠಾಣೆ ಅಥವಾ ತುರ್ತು ಸಹಾಯವಾಣಿ 112ಗೆ ಕರೆ ಮಾಡಿ ಮಾಹಿತಿ ನೀಡಬಹುದು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ತಿಳಿಸಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ–1 ಅನಿಲ್ ಕುಮಾರ್ ಭೂಮರೆಡ್ಡಿ ಸುದ್ದಿಗೋಷ್ಠಿಯಲ್ಲಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.