ಶಿವಮೊಗ್ಗ: ‘ಬಾಕಿ ನಾಲ್ಕು ವರ್ಷ ಮಾತ್ರವಲ್ಲ, ಮುಂದಿನ ಐದು ವರ್ಷವೂ ನಾವೇ (ಕಾಂಗ್ರೆಸ್) ಅಧಿಕಾರ ನಡೆಸಲಿದ್ದೇವೆ. ಹೀಗಾಗಿ ಇನ್ನೂ 9 ವರ್ಷ ‘ಗ್ಯಾರಂಟಿ’ ಯೋಜನೆಗಳು ಮುಂದುವರಿಯಲಿವೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶನಿವಾರ ಹೇಳಿದರು.
ಜಿಲ್ಲಾಡಳಿತ ಆಯೋಜಿಸಿದ್ದ ‘ಗ್ಯಾರಂಟಿ’ ಯೋಜನೆಗಳ ಫಲಾನುಭವಿಗಳ ಜಿಲ್ಲಾಮಟ್ಟದ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಜನರ ಭಾವನೆಗಳ ಮೇಲೆ ರಾಜಕಾರಣ ಮಾಡುತ್ತದೆ. ನಾವು ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತಿದ್ದೇವೆ‘ ಎಂದರು.
‘ಐದು ಬೆರಳು ಸೇರಿ ಕೈ ಮುಷ್ಠಿಯಾಯಿತು. ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು. ಇದನ್ನು ನೋಡಿದ ಕಮಲ ಉದುರಿ ಹೋಯಿತು. ತೆನೆ ಹೊತ್ತ ಮಹಿಳೆ ತೆನೆ ಎಸೆದು ಹೋದಳು. ಕರ್ನಾಟಕ ಪ್ರಬುದ್ಧವಾಯಿತು. ಸಮೃದ್ಧಿಯಾಯಿತು’ ಎಂದೂ ಕವಿತೆ ವಾಚಿಸಿದರು.
‘ಗ್ಯಾರಂಟಿ ಯೋಜನೆಗಳನ್ನು ಅಲ್ಪಸಂಖ್ಯಾತರಿಗೆ ಕೊಟ್ಟಿರುವುದಕ್ಕೆ ಬಿಜೆಪಿಯವರು ವಿರೋಧ ಮಾಡುತ್ತಾರೆ. ಆ ಸಮುದಾಯದವರು ತೆರಿಗೆ ಕಟ್ಟುವುದಿಲ್ಲವೇ’ ಎಂದು ಪ್ರಶ್ನಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.