ADVERTISEMENT

ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ತೆಲುಗು ಕ್ರೈಸ್ತ ಒಕ್ಕೂಟ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2024, 15:55 IST
Last Updated 14 ಮಾರ್ಚ್ 2024, 15:55 IST

ಭದ್ರಾವತಿ: ಕ್ರೈಸ್ತ ಸಮುದಾಯದ ಹಿತರಕ್ಷಣೆ ದೃಷ್ಟಿಯಿಂದ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಲು ತೀರ್ಮಾನಿಸಲಾಗಿದೆ ಎಂದು ತೆಲುಗು ಕ್ರೈಸ್ತ ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಯೇಸುದಾಸ್ ತಿಳಿಸಿದರು.

ಹಿಂದಿನ ಚುನಾವಣೆಯಲ್ಲಿ ಲೋಕಸಭಾ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರನ್ನು ಬೆಂಬಲಿಸಲಾಗಿತ್ತು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರನ್ನು ಬೆಂಬಲಿಸಲು ತೀರ್ಮಾನಿಸಲಾಗಿದೆ ಎಂದು ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕ್ರೈಸ್ತ ಸಂಘಟಕರಿಗೆ ಕಿರುಕುಳ ಹೆಚ್ಚುತ್ತಿದೆ. ಕ್ರೈಸ್ತ ಸಮುದಾಯದವರು ಬಹಳಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ರಾಜಕೀಯ ಸ್ಥಾನಮಾನದಲ್ಲೂ ನಿರ್ಲಕ್ಷ್ಯಕ್ಕೆ ಒಳಗಾಗಿದ್ದಾರೆ. ಇಂತಹ ಸನ್ನಿವೇಶದಲ್ಲಿ ನಮ್ಮ ರಕ್ಷಣೆಗಾಗಿ ಕಾಂಗ್ರೆಸ್ ನಮ್ಮ ಆದ್ಯತೆ ಎಂದು ಹೇಳಿದರು.

ADVERTISEMENT

ತಾಲೂಕಿನಲ್ಲಿ 25,000 ಕ್ರೈಸ್ತ ಮತದಾರರಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪನವರು ಜಾತ್ಯತೀತ ನಾಯಕರಾಗಿದ್ದರು. ಅವರು ಎಲ್ಲಾ ಜಾತಿ, ಧರ್ಮಗಳ ಜನರ ಪರವಾಗಿ ಶ್ರಮಿಸಿದ್ದರು. ಈ ಹಿನ್ನೆಲೆಯಲ್ಲಿ ಅವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಅವರನ್ನು ಬೆಂಬಲಿಸಲಾಗುತ್ತಿದೆ. ಅಲ್ಲದೇ ಕ್ಷೇತ್ರದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಅವರು ಕ್ರೈಸ್ತ ಸಮುದಾಯದ ಪರವಾಗಿದ್ದಾರೆ ಎಂದು ತೆಲುಗು ಕ್ರಿಶ್ಚಿಯನ್ ವೆಲ್‌ಫೇರ್‌ ಅಸೋಸಿಯೇಷನ್ ಅಧ್ಯಕ್ಷ ಜೆ.ಭಾಸ್ಕರ್ ಬಾಬು ತಿಳಿಸಿದರು.

ಫಾಸ್ಟರ್‌ಗಳಾದ ಜಾನ್ಸನ್, ಉಮೇಶ್, ಜಯರಾಂ, ಪ್ರಭಾಕರ್, ಅಂತೋಣಿ ಪ್ರಕಾಶ್, ಮುಖಂಡರಾದ ಗ್ಯಾಬ್ರಿಯಲ್, ರಾಜು, ಅಂತೋಣಿ, ಎಂ.ಸಾಮ್ಯುಯೆಲ್, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಸೇರಿ ಹಲವರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.