ಶಿವಮೊಗ್ಗ: ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ ನೀಡಲು ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ ಹಾಗೂ ವಿದ್ಯಾರ್ಥಿ ವೇತನ ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಗ್ರಾಮೀಣ ಪ್ರದೇಶದ ಸಾವಿರಾರು ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣ ಪಡೆಯುವ ಉದ್ದೇಶದಿಂದ ನಗರ ಪ್ರದೇಶಕ್ಕೆ ಬಂದಿದ್ದಾರೆ. ಕಾಲೇಜು ಮತ್ತು ಪ್ರೌಢಶಾಲೆಗಳು ಈಗಾಗಲೇ ಆರಂಭವಾಗಿವೆ. ಆದರೂ ಕೂಡ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶ ಸಿಕ್ಕಿಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ತುಂಬಾ ಕಷ್ಟವಾಗಿದೆ. ಎಲ್ಲಿ ಉಳಿದುಕೊಳ್ಳಬೇಕು ಎಂಬುದೇ ದೊಡ್ಡ ಪ್ರಶ್ನೆಯಾಗಿದೆ. ಹಾಸ್ಟೆಲ್ಗಳಿಗ ಅರ್ಜಿ ಹಾಕಿ ವಿದ್ಯಾರ್ಥಿಗಳು ಕಾಯುತ್ತಿದ್ದಾರೆ. ಸರ್ಕಾರ ತಕ್ಷಣವೇ ವಿದ್ಯಾರ್ಥಿಗಳಿಗೆ ಪ್ರವೇಶಾತಿ ನೀಡಬೇಕು ಮತ್ತು ಹಾಸ್ಟೆಲ್ಗಳ ಸಂಖ್ಯೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.
ಅಲ್ಲದೇ ಅವರಿಗೆ ವಿದ್ಯಾರ್ಥಿ ವೇತನ ಕೂಡ ಸಿಗುತ್ತಿಲ್ಲ. ಇದರಿಂದ ಬಡ ವಿದ್ಯಾರ್ಥಿಗಳಿಗೆ ತುಂಬ ಕಷ್ಟವಾಗಿದೆ. ವಿದ್ಯಾಸಿರಿ ವಿದ್ಯಾರ್ಥಿ ವೇತನವೂ ಸರಿಯಾಗಿ ಜಮೆಯಾಗುತ್ತಿಲ್ಲ. ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಕಡಿತಗೊಳಿಸಲಾಗಿದೆ. ವಿದ್ಯಾನಿಧಿ ರದ್ದುಗೊಳಿಸಲಾಗಿದೆ. ಸರ್ಕಾರ ತಕ್ಷಣವೇ ಎಲ್ಲಾ ರೀತಿಯ ವಿದ್ಯಾರ್ಥಿ ವೇತನಗಳನ್ನು ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ಬಿ.ಅಭಿಷೇಕ್, ಪ್ರಮುಖರಾದ ಪುನೀತ್, ಸಚಿನ್, ಲೋಹಿತ್, ಯಶಸ್ವಿನಿ, ರೋಹಿತ್, ಸಿಂಚನ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.