ಶಿರಾಳಕೊಪ್ಪ: ವಿಜ್ಞಾನ ಸಾಕಷ್ಟು ಮುಂದುವರಿದಿದ್ದರೂ ಒಂದು ಹನಿ ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ಹಾಗಾಗಿ, ರಕ್ತದಾನ ಅತ್ಯಂತ ಶ್ರೇಷ್ಠವಾಗಿದ್ದು, ಒಂದು ಯೂನಿಟ್ ರಕ್ತದಿಂದ ನಾಲ್ಕು ಜನರ ಜೀವ ಉಳಿಸಬಹುದು ಎಂದು ತಾಲೂಕು ಆರೋಗ್ಯಾಧಿಕಾರಿ ನವೀದ್ ಖಾನ್ ತಿಳಿಸಿದರು.
ರಕ್ತದಾನಿಗಳ ದಿನಾಚರಣೆ ಅಂಗವಾಗಿ ಶಿರಾಳಕೊಪ್ಪ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ಘಟಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮುದಾಯ ಆರೋಗ್ಯ ಕೇಂದ್ರ, ಜಿಲ್ಲಾ ರಕ್ತನಿಧಿ ಕೇಂದ್ರ ಹಾಗೂ ಕೊಳಗಿ ಗ್ರಾಮದ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.
ಶಿರಾಳಕೊಪ್ಪ ಭಾಗದಲ್ಲಿ ಅತಿಹೆಚ್ಚು ರಕ್ತದಾನ ಶಿಬಿರಗಳನ್ನು ಏರ್ಪಡಿಸಲಾಗುತ್ತಿದ್ದು, ಅವುಗಳ ಯಶಸ್ಸಿಗೆ ಎಲ್ಲರ ಪಾತ್ರ ಮುಖ್ಯವಾಗಿದೆ ಎಂದು ಹೇಳಿದರು.
ಕಾಲೇಜಿನಲ್ಲಿ ನಾಲ್ಕು ವರ್ಷದಿಂದ ಅನೇಕ ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗಿತ್ತು. ಆರೋಗ್ಯ ಇಲಾಖೆ ಹಾಗೂ ವಿದ್ಯಾರ್ಥಿಗಳ ಸಹಕಾರದಿಂದ ಯಶಸ್ವಿಯಾಗಿ ನಡೆದಿವೆ ಎಂದು ಪ್ರಾಚಾರ್ಯ ಪ್ರಭಾಕರ ಮಂಟೂರೆ ತಿಳಿಸಿದರು.
ಕೊಳಗಿ ರೇವಣಪ್ಪ ರಕ್ತದಾನ ಶಿಬಿರವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪವನ್, ಹಿರಿಯ ಆರೋಗ್ಯ ನಿರೀಕ್ಷಕ ಸುರೇಶ್, ಅರುಣಕುಮಾರ್, ಎನ್ಎಸ್ಎಸ್ ಘಟಕದ ಷಡಾಕ್ಷರಪ್ಪ, ಯೋಗೀಶ್, ಪ್ರಿಯಾ, ಎಳಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ಮೆಗ್ಗಾನ್ ಆಸ್ಪತ್ರೆ ರಕ್ತ ಕೇಂದ್ರದ ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.