ಸಾಗರ: ‘ತಾಲ್ಲೂಕಿನ ಯಡಜಿಗಳಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೆಲವರು ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿಯನ್ನು ಕಬಳಿಸಲು ಮುಂದಾಗಿದ್ದಾರೆ. ಇದಕ್ಕೆ ಪಂಚಾಯಿತಿ ಆಡಳಿತ ಕಾನೂನು ಕ್ರಮ ಕೈಗೊಳ್ಳಲಿದೆ’ ಎಂದು ಪಂಚಾಯಿತಿ ಅಧ್ಯಕ್ಷೆ ನಾಗವೇಣಿ ಪ್ರವೀಣ್ ತಿಳಿಸಿದರು.
‘ಮಂಕಳಲೆ ಗ್ರಾಮದ ಸ.ನಂ. 96 ಮತ್ತು 68ರಲ್ಲಿ ನಕಲಿ ಹಕ್ಕುಪತ್ರ ಸೃಷ್ಟಿಸಿ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಲು ಕೆಲವರು ಮುಂದಾಗಿದ್ದಾರೆ. ಈ ಬಗ್ಗೆ ಎಸಿಬಿ, ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ’ ಎಂದು ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
‘ನಕಲಿ ದಾಖಲೆ ಸೃಷ್ಟಿಸಿ ಅದರ ಆಧಾರದ ಮೇಲೆ ಕೆಲವರು ಬ್ಯಾಂಕಿನಿಂದ ಸಾಲ ತೆಗೆದು ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆ ನಿರ್ಮಿಸಲು ಮುಂದಾಗಿದ್ದಾರೆ. ಇದರಲ್ಲಿ ಪ್ರಭಾವಿ ವ್ಯಕ್ತಿಗಳ ಪಾತ್ರವಿದೆ. ತಾಲ್ಲೂಕು ಆಡಳಿತ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದು ಗ್ರಾಮ ಪಂಚಾಯಿತಿ ಸದಸ್ಯ ಮಂಜುನಾಥ್ ಹಕ್ರೆ ಒತ್ತಾಯಿಸಿದರು.
‘ಯಡಜಿಗಳಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಭೂ ಪ್ರದೇಶ ನಗರ ಪ್ರದೇಶಕ್ಕೆ ಹತ್ತಿರದಲ್ಲಿದ್ದು ಮಾರುಕಟ್ಟೆಯಲ್ಲಿ ಬೇಡಿಕೆ ಇರುವ ಜಾಗವಾಗಿದೆ. ಈ ಕಾರಣ ಕೆಲವರು ಕಾನೂನಿನ ನಿಯಮಗಳನ್ನು ಉಲ್ಲಂಘಿಸಿ ಅಕ್ರಮ ಲಾಭ ಮಾಡಿಕೊಳ್ಳಲು ಮುಂದಾಗಿದ್ದಾರೆ’ ಎಂದು ಪಂಚಾಯಿತಿ ಸದಸ್ಯ ಗಿರೀಶ್ ಹಕ್ರೆ ಆರೋಪಿಸಿದರು.
ಪ್ರಮುಖರಾದ ಎಸ್.ಬಿ. ಮಂಜುನಾಥ್, ಮನುಕುಮಾರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.