ಸಾಗರ: ಪದವೀಧರ, ಶಿಕ್ಷಕರ ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸ್ಪಂದಿಸಲಿದೆ. ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ನೈರುತ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳಾದ ಆಯನೂರು ಮಂಜುನಾಥ್ ಹಾಗೂ ಕೆ.ಮಂಜುನಾಥ್ ಅವರನ್ನು ಪದವೀಧರರು, ಶಿಕ್ಷಕರು ಬೆಂಬಲಿಸಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಮನವಿ ಮಾಡಿದರು.
‘ವಿಧಾನಸಭೆಯಲ್ಲಿ ಕಾಂಗ್ರೆಸ್ಗೆ ಸಂಪೂರ್ಣ ಬಹುಮತವಿದೆ. ವಿಧಾನ ಪರಿಷತ್ನಲ್ಲೂ ಇದೇ ಮಾದರಿಯ ಬಹುಮತ ಲಭ್ಯವಾದರೆ ಹಲವು ಕಾಯ್ದೆ, ಬಿಲ್ಗಳನ್ನು ಪಾಸ್ ಮಾಡಲು ಅನುಕೂಲವಾಗುತ್ತದೆ ಎಂಬುದನ್ನು ಮತದಾರರು ಅರ್ಥ ಮಾಡಿಕೊಳ್ಳಬೇಕು’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
‘ಹಳೆ ಪಿಂಚಣಿ ರದ್ದತಿ ವಿಷಯಕ್ಕೆ ಸಂಬಂಧಿಸಿದಂತೆ ಶಿಕ್ಷಕರ ಬೇಡಿಕೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಪ್ರಮುಖ ಸಮಸ್ಯೆಯನ್ನು ಬಗೆಹರಿಸುವ ಇಚ್ಛಾಶಕ್ತಿ ಇರುವುದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ. ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಸಮರ್ಥ ಅಭ್ಯರ್ಥಿಗಳನ್ನೇ ಕಾಂಗ್ರೆಸ್ ಕಣಕ್ಕೆ ಇಳಿಸಿದ್ದು, ವಿಧಾನ ಪರಿಷತ್ನಲ್ಲಿ ಗಟ್ಟಿಯಾಗಿ ಧ್ವನಿ ಎತ್ತುವ ಸಾಮರ್ಥ್ಯವಿರುವ ಅವರನ್ನು ಬೆಂಬಲಿಸಬೇಕು’ ಎಂದು ಕೋರಿದರು.
‘ಲೋಕಸಭೆ ಚುನಾವಣೆ ಅವಧಿ ದೀರ್ಘಾವಾಗಿದೆ. ಇದರಿಂದಾಗಿ ನೀತಿಸಂಹಿತೆ ಅವಧಿ ಕೂಡ ವಿಸ್ತರಿಸಲಾಗಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿ ಉಂಟಾಗಿದೆ. ಚುನಾವಣಾ ಪ್ರಕ್ರಿಯೆಯನ್ನು ನಾಲ್ಕು ಹಂತದೊಳಗೆ ಪೂರೈಸುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಕ್ರಮ ಕೈಗೊಳ್ಳುವುದು ಸೂಕ್ತ’ ಎಂದು ಅವರು ಅಭಿಪ್ರಾಯಪಟ್ಟರು.
ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹತಾಶರಾಗಿ ದಿನಕ್ಕೊಂದು ಹೇಳಿಕೆ ನೀಡುತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಕೌಟುಂಬಿಕ ಕಲಹದ ಕಾರಣಕ್ಕೆ ಎಚ್.ಡಿ.ಕುಮಾರಸ್ವಾಮಿ ಅವರೇ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ ಪೆನ್ ಡ್ರೈವ್ ಬಹಿರಂಗಗೊಳಿಸಿರುವ ಅನುಮಾನವಿದೆ ಎಂದು ಹೇಳಿದರು.
ಕಾಂಗ್ರೆಸ್ನ ಪ್ರಮುಖರಾದ ಬಿ.ಆರ್.ಜಯಂತ್, ಕಲಸೆ ಚಂದ್ರಪ್ಪ, ಐ.ಎನ್.ಸುರೇಶ್ ಬಾಬು, ಪ್ರಭಾವತಿ ಚಂದ್ರಕಾಂತ್, ಚೇತನ್ ರಾಜ್ ಕಣ್ಣೂರು, ಮಹಾಬಲ ಕೌತಿ, ಕೆ.ಹೊಳಿಯಪ್ಪ, ವಿ.ಶಂಕರ್, ರವಿಕುಮಾರ ಗೌಡ, ಗಣಪತಿ ಮಂಡಗಳಲೆ, ಅಶೋಕ್ ಬೇಳೂರು, ಸೋಮಶೇಖರ್ ಲ್ಯಾವಿಗೆರೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.