ತುಮಕೂರು: ಭ್ರೂಣಲಿಂಗ ಪತ್ತೆ ಮಾಡುವ ವ್ಯಕ್ತಿ, ಸ್ಕ್ಯಾನಿಂಗ್ ಕೇಂದ್ರದ ಬಗ್ಗೆ ಮಾಹಿತಿ ನೀಡಿದರೆ ₹1 ಲಕ್ಷ ಬಹುಮಾನ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಡಿ.ಎನ್.ಮಂಜುನಾಥ್ ತಿಳಿಸಿದರು.
ನಗರದ ಡಿಎಚ್ಒ ಕಚೇರಿಯಲ್ಲಿ ಈಚೆಗೆ ನಡೆದ ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿ, ‘ಭ್ರೂಣಲಿಂಗ ಪತ್ತೆ ಬಗ್ಗೆ ನಿಖರ ಮಾಹಿತಿ ನೀಡಿದವರಿಗೆ ಸರ್ಕಾರ ಬಹುಮಾನ ನಿಗದಿಪಡಿಸಿದೆ. ಸ್ಕ್ಯಾನಿಂಗ್ ಕೇಂದ್ರಗಳು ವೈದ್ಯಕೀಯ ಗರ್ಭಪಾತಕ್ಕೆ ಸಂಬಂಧಿಸಿದ ವರದಿಗಳನ್ನು ಕಡ್ಡಾಯವಾಗಿ 2 ವರ್ಷಗಳ ಕಾಲ ಸಂರಕ್ಷಿಸಬೇಕು’ ಎಂದು ಸೂಚಿಸಿದರು.
ಗರ್ಭಿಣಿಯರನ್ನು ಸ್ಕ್ಯಾನಿಂಗ್ ಕೇಂದ್ರಗಳಿಗೆ ಕಳುಹಿಸುವ ಮುನ್ನ ರೆಫರಲ್ ಸ್ಲಿಪ್ ನೀಡುವುದು ಅಗತ್ಯ. ರೆಫರಲ್ ಸ್ಲಿಪ್ನಲ್ಲಿ ಕಡ್ಡಾಯವಾಗಿ ಆರ್ಸಿಎಚ್ ಐ.ಡಿ ನಮೂದಿಸಬೇಕು. ರೆಫರಲ್ ಸ್ಲಿಪ್ ಹಾಗೂ ಆರ್ಸಿಎಚ್ ಐ.ಡಿ ಇಲ್ಲದೆ ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸ್ಕ್ಯಾನಿಂಗ್ ಮಾಡುವಂತಿಲ್ಲ ಎಂದರು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಬಿ.ರೇಖಾ, ಜಿಲ್ಲಾ ಆಸ್ಪತ್ರೆ ಸ್ತ್ರೀರೋಗ ತಜ್ಞ ಡಾ.ಲೋಕೇಶ್ ರೆಡ್ಡಿ, ಮಕ್ಕಳ ತಜ್ಞ ಡಾ.ಸಂತೋಷ್, ವಕೀಲ ಕುಮಾರಸ್ವಾಮಿ ಇತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.